ಸೊರಬ: `ನಾಗರಿಕ ಸೌಲಭ್ಯ ಪಡೆಯಲು ಆಧಾರ್ ಕಾರ್ಡ್ ಅವಶ್ಯವಾಗಿದ್ದು, ಪ್ರತಿಯೊಬ್ಬರೂ ನೋಂದಣಿ ಮಾಡಿಸಿ ಯೋಜನೆ ಸದುಪಯೋಗ ಪಡಿಸಿಕೊಳ್ಳಬೇಕು' ಎಂದು ಶಾಸಕ ಮಧು ಬಂಗಾರಪ್ಪ ಹೇಳಿದರು.
ಪಟ್ಟಣದ ಅಂಬೇಡ್ಕರ್ ಸಮುದಾಯ ಭವನದಲ್ಲಿ ಬುಧವಾರ ತಮ್ಮ ಕುಟುಂಬದ `ಆಧಾರ್' ಕಾರ್ಡ್ ನೋಂದಣಿ ಮಾಡಿಸಿದ ನಂತರ ಸಮುದಾಯ ಭವನದಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಸರ್ಕಾರ ಬಡವರಿಗಾಗಿ ರೂಪಿಸುವ ಯೋಜನೆಗಳು ಸದುಪ ಯೋಗವಾಗಬೇಕು. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಸಹಭಾಗಿತ್ವದಲ್ಲಿ ಸರ್ಕಾರದ ಯೋಜನೆಗಳನ್ನು ನಾಗರಿಕರ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆ ಮಾಡಿದಾಗ ಜನಪ್ರತಿನಿಧಿಗೆ ಸಾರ್ಥಕತೆ ಬರುತ್ತದೆ ಎಂದರು.
ತಾಲ್ಲೂಕಿನ ಎಲ್ಲರಿಗೂ ಆಧಾರ್ ಕಾರ್ಡ್ ಮಾಡಿಸಲು ಕೇವಲ ಒಂದು ಅಂಚೆ ಕಚೇರಿ ಸಾಕಾಗುವುದಿಲ್ಲ ಎಂದು ಸಾರ್ವಜನಿಕರು ದೂರಿದ್ದರು. ಈ ಹಿನ್ನೆಲೆಯಲ್ಲಿ ಪಟ್ಟಣದ ಅಂಬೇಡ್ಕರ್ ಸಮುದಾಯ ಭವನ, ಕುಪ್ಪಗಡ್ಡೆ ಹಾಗೂ ಆನವಟ್ಟಿಯಲ್ಲಿ ಹೆಚ್ಚುವರಿಯಾಗಿ ನೋಂದಣಿ ಕೇಂದ್ರ ಆರಂಭಿಸಲಾಗಿದೆ ಎಂದರು.
ತಹಶೀಲ್ದಾರ್ ತೇಜಸ್ ಕುಮಾರ್ ಮಾತನಾಡಿ, ಮುಂದಿನ ದಿನಗಳಲ್ಲಿ ಜಡೆ, ಚಂದ್ರಗುತ್ತಿ, ಉಳವಿ ಹೋಬಳಿಗಳಲ್ಲಿ ಆಧಾರ್ ನೋಂದಣಿ ಕೇಂದ್ರ ತೆರೆಯಲು ನಿರ್ಧರಿಸಲಾಗಿದ್ದು, ಪ್ರತೀ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲೂ ಆಧಾರ್ ಕೇಂದ್ರ ಸ್ಥಾಪಿಸುವ ಯೋಚನೆ ಇದೆ ಎಂದರು.
ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಜಿ.ಟಿ.ವೀರೇಶ್ಕುಮಾರ್, ಜೆಡಿಎಸ್ ಬ್ಲಾಕ್ ಅಧ್ಯಕ್ಷ ಎಚ್.ಗಣಪತಿ, ಆನವಟ್ಟಿ ಬ್ಲಾಕ್ ಅಧ್ಯಕ್ಷ ಕೆ.ಪಿ.ರುದ್ರಗೌಡ, ಮಹಿಳಾ ಬ್ಲಾಕ್ ಅಧ್ಯಕ್ಷೆ ಶೇಖರಮ್ಮ, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಸದಾನಂದಗೌಡ ಬಿಳಗಲಿ, ಪಟ್ಟಣ ಪಂಚಾಯ್ತಿ ಸದಸ್ಯ ಪ್ರಶಾಂತ್ ಮೇಸ್ತ್ರಿ, ಅತಿಕುರ್ ರೆಹಮಾನ್, ಯು. ಫಯಾಜ್ ಅಹ್ಮದ್, ಬಿಳವಾಣಿ ಸುರೇಶ್ ಇದ್ದರು.