ಬೆಂಗಳೂರು: ಬೆಂಗಳೂರು ಸರಣಿ ಸ್ಫೋಟ ಪ್ರಕರಣದ ಆರೋಪದಲ್ಲಿ ಬಂಧಿತರಾಗಿರುವ ಅಬ್ದುಲ್ ನಾಸರ್ ಮದನಿ ಅವರನ್ನು ಈ ಕೂಡಲೇ ಜಾಮೀನಿನ ಮೇಲೆ ಬಿಡುಗಡೆಗೊಳಿಸಬೇಕು ಎಂದು ದಲಿತ, ಹಿಂದುಳಿದ, ಅಲ್ಪಸಂಖ್ಯಾತ ಒಕ್ಕೂಟವು ಆಗ್ರಹಿಸಿದೆ.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ಅಶೋಕ್ ಮ್ಯಾಥ್ಯೂ ಅವರು, `ಮದನಿ ನಿರಪರಾಧಿಯಾಗಿದ್ದಾರೆ. ಒಂಬತ್ತು ವರ್ಷಗಳನ್ನು ಸೆರೆಮನೆಯಲ್ಲಿ ಕಳೆದಿದ್ದಾರೆ. ಈಗ ಹಲವು ರೋಗಗಳಿಂದ ಬಳಲುತ್ತಿದ್ದಾರೆ. ಆದ್ದರಿಂದ ಮಾನವೀಯತೆಯ ದೃಷ್ಟಿಯಿಂದ ಅವರನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಬೇಕು' ಎಂದು ಆಗ್ರಹಿಸಿದರು.
`ಹಲವು ರೋಗಗಳಿಂದ ಬಳಲುತ್ತಿರುವ ಅವರಿಗೆ ಚಿಕಿತ್ಸೆ ನೀಡುವಂತೆ ಕೋರ್ಟ್ ಹೇಳಿದೆ. ಆದರೂ, ಅವರಿಗೆ ಯಾವುದೇ ಚಿಕಿತ್ಸೆಯನ್ನು ಸರಿಯಾಗಿ ನೀಡದೆ ಅವರ ಮೇಲೆ ದೌರ್ಜನ್ಯವನ್ನು ಎಸಗಲಾಗುತ್ತಿದೆ. ಪೊಲೀಸರು ಅವರನ್ನು ವಿನಾಕಾರಣ ಶೋಷಣೆ ಮಾಡುತ್ತಿದ್ದಾರೆ' ಎಂದು ಆರೋಪಿಸಿದರು.
`ರಾಜ್ಯದಲ್ಲಿರುವ ಬಿಜೆಪಿ ಸರ್ಕಾರವೇ ಮಾನವ ಹಕ್ಕುಗಳ ಉಲ್ಲಂಘನೆಗೆ ಕಾರಣವಾಗಿದೆ. ಮದನಿ ವಿಷಯದಲ್ಲಿಯೂ ಬಿಜೆಪಿ ಸರ್ಕಾರ ರಾಜಕೀಯವನ್ನು ಮಾಡುತ್ತಿದೆ' ಎಂದು ಅವರು ಹೇಳಿದರು.