ಬಳ್ಳಾರಿ: ಕೇಂದ್ರ ಸರ್ಕಾರದ ಅಡಿ ಮಂಜೂರಾದ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣ ಗೊಳಿಸಬೇಕು ಎಂದು ಸಂಸದೆ ಜೆ.ಶಾಂತಾ ಅವರು ಗುರುವಾರ ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಸೂಚಿಸಿದರು.
ಇಲ್ಲಿಯ ಜಿಲ್ಲಾ ಪಂಚಾಯಿತಿಯ ನಜೀರ್ಸಾಬ್ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಮೇಲುಸ್ತುವಾರಿ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.
’ಗ್ರಾಮೀಣ ಪ್ರದೇಶದ ಸರ್ವತೋಮುಖ ಅಭಿವೃದ್ಧಿಗಾಗಿ ಅನುಷ್ಠಾನಗೊಳಿಸುತ್ತಿರುವ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ಅಡಿ ಕಾಮಗಾರಿಗಳನ್ನು ಗುಣಮಟ್ಟದಲ್ಲಿ ಪೂರ್ಣಗೊಳಿಸಬೇಕು’ ಎಂದು ಅವರು ಅಧಿಕಾರಿಗಳಿಗೆ ತಾಕೀತು ಮಾಡಿದರು.
‘ಯಾವುದೇ ಲೋಪ ಆಗದಂತೆ ಕಾಮಗಾರಿಗಳ ಗುಣಮಟ್ಟ ಪರಿಶೀಲಿಸಿ, ಜಾಬ್ ಕಾರ್ಡುದಾರರಿಗೆ ಸ್ಮಾರ್ಟ್ ಕಾರ್ಡುಗಳ ಮೂಲಕ ಪಾವತಿ ಮಾಡಬೇಕು’ ಎಂದು ಅವರು ಸೂಚಿಸಿದರು.
’ಈಗಾಗಲೇ ಪರಮದೇವನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಸ್ಮಾರ್ಟ್ ಕಾರ್ಡ್ ವಿತರಿಸಲಾಗಿದೆ. ಸ್ಮಾರ್ಟ್ ಕಾರ್ಡುಗಳ ವಿತರಣೆಗೆ ಬ್ಯಾಂಕ್ ಅಧಿಕಾರಿಗಳು ಸಹಕರಿಸಬೇಕು’ ಎಂದು ಜೆ.ಶಾಂತಾ ಅವರು ಹೇಳಿದರು.
’ಎಲ್ಲ ಶಾಲೆಗಳಿಗೂ ಉತ್ತಮ ಗುಣಮಟ್ಟದ ಕಾಂಪೌಂಡ್ ನಿರ್ಮಾಣ ಮಾಡಬೇಕು. ಜಾಬ್ ಕಾರ್ಡ್ ಹೊಂದಿರುವವರು ಪ್ರತಿ ಮನೆಗಳ ಮುಂದೆ ಗಿಡ ನೆಟ್ಟು, ಅರಣ್ಯೀಕರಣಕ್ಕೆ ಆದ್ಯತೆ ನೀಡಬೇಕು’ ಎಂದು ಅವರು ಸೂಚಿಸಿದರು. ಜಿಲ್ಲಾ ಪಂಚಾಯ್ತಿ ಮಾಜಿ ಉಪಾಧ್ಯಕ್ಷೆ ಮಂಜಮ್ಮ ಮತ್ತಿತರರ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.