ಕುಶಾಲನಗರ: ಕುಷ್ಠ ಪೀಡಿತರು ನಿಯಮಿತವಾಗಿ ಚಿಕಿತ್ಸೆ ಪಡೆಯುವ ಮೂಲಕ ರೋಗದಿಂದ ಮುಕ್ತರಾಗಬೇಕು ಎಂದು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಮಂಗಳವಾರ ಹೇಳಿದರು.
ಕೊಡಗು ಜಿಲ್ಲಾ ಪಂಚಾಯ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆಶ್ರಯದಲ್ಲಿ ಮಂಗಳವಾರ ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಏರ್ಪಡಿಸಿದ್ದ ಜಿಲ್ಲಾಮಟ್ಟದ ರಾಷ್ಟ್ರೀಯ ಕುಷ್ಠರೋಗ ವಿರೋಧಿ ಮಾಸಾಚರಣೆ ಉದ್ಘಾಟಿಸಿ ಮಾತನಾಡಿದರು.
ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸುವ ಮೂಲಕ ರೋಗ ಬಾರದಂತೆ ಮುಂಜಾಗ್ರತೆ ವಹಿಸಬೇಕು. ಆರೋಗ್ಯಕರ ಸಮಾಜ ನಿರ್ಮಾಣ ಮಾಡಬೇಕು ಎಂದರು. ವೈದ್ಯರು ಮತ್ತು ಸಿಬ್ಬಂದಿಗಳು ಗ್ರಾಮೀಣ ಪ್ರದೇಶದ ಜನರಲ್ಲಿ ಆರೋಗ್ಯ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದರು.
ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷೆ ಎಚ್.ಎಂ.ಕಾವೇರಿ ಮಾತನಾಡಿದರು. ಜಿ.ಪಂ.ಸದಸ್ಯೆ ಚಿತ್ರಕಲಾರಾಜೇಶ್ ಜಾಥಾಕ್ಕೆ ಚಾಲನೆ ನೀಡಿದರು. ಕೂಡುಮಂಗಳೂರು ಗ್ರಾ.ಪಂ.ಅಧ್ಯಕ್ಷೆ ಹೇಮಾವತಿ ಅಧ್ಯಕ್ಷತೆ ವಹಿಸಿದ್ದರು.
ತಾ.ಪಂ.ಸದಸ್ಯರಾದ ಪಾರ್ವತಮ್ಮ, ಬಿ.ವಿ.ಸತೀಶ್, ಆರ್ಎಂಸಿ ನಿರ್ದೇಶಕ ಎಂ.ಬಿ.ಜಯಂತ್, ಮುಳ್ಳುಸೋಗೆ ಗ್ರಾ.ಪಂ.ಅಧ್ಯಕ್ಷೆ ಕಮಲಮ್ಮ, ಕೂಡುಮಂಗಳೂರು ಗ್ರಾ.ಪಂ.ಉಪಾಧ್ಯಕ್ಷ ಗುಜೇಂದ್ರ, ರಾಮೇಶ್ವರ ಕೃಷಿ ಪ್ರಾಥಮಿಕ ಸಹಕಾರ ಬ್ಯಾಂಕ್ನ ಅಧ್ಯಕ್ಷ ಕೆ.ಕೆ.ಬೋಗಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಎಸ್.ಶಿವಕುಮಾರ್,ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಎಂ.ಯು.ಚೇತನ್, ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರ ಆರೋಗ್ಯಾಧಿಕಾರಿ ಡಾ.ಡಿ.ಸಿ.ರವಿಚಂದ್ರ, ಹಿರಿಯರಾದ ಎಂ.ಟಿ.ಮೂಡ್ಲಿಗೌಡ ಉಪಸ್ಥಿತರಿದ್ದರು.
ವಿದ್ಯಾರ್ಥಿ ದೀಕ್ಷಿತ ಮತ್ತು ತಂಡದವರು ಪ್ರಾರ್ಥಿಸಿದರು. ಉ.ರಾ.ನಾಗೇಶ್ ನಿರ್ವಹಿಸಿದರು. ಇದಕ್ಕೂ ಮೊದಲು ಕೂಡಿಗೆ ಶಾಲಾ ವಿದ್ಯಾರ್ಥಿಗಳು ಕುಷ್ಠ ರೋಗ ವಿರೋಧಿ ಮಾಸಾಚರಣೆ ಕುರಿತು ಕೂಡಿಗೆ, ಕೂಡುಮಂಗಳೂರು ಗ್ರಾಮಗಳಲ್ಲಿ ಜಾಗತಿ ಜಾಥಾ ನಡೆಸಿದರು.