ಕರ್ನಾಟಕದ ಮಂಗಳೂರಿನಲ್ಲಿ 1930ರಲ್ಲಿ ರೋಮನ್ ಕ್ಯಾಥೋಲಿಕ್ ಕುಟುಂಬದಲ್ಲಿ ಜಾರ್ಜ್ ಫರ್ನಾಂಡಿಸ್ ಜನಿಸಿದರು. ಇವರು ಕಾರ್ಮಿಕ ಸಂಘಟನೆಯ ನೇತಾರ, ಕೃಷಿಕ, ಸಾಮಾಜಿಕ ಕಾರ್ಯಕರ್ತ ಮತ್ತು ಪತ್ರಕರ್ತರಾಗಿದ್ದ ಅಪರೂಪದ ಸಂಸದ.
ಕ್ರಮವಾಗಿ ಜಾರ್ಜ್ ಅವರು 4, 6, 7 9, 10, 11, 12, 13, 14ನೇ ಲೋಕಸಭೆಗೆ ಮತ್ತು 2009ರಲ್ಲಿ ರಾಜ್ಯಸಭೆ ಪ್ರವೇಶಿಸಿದ್ದರು.
ಅವರು ಕಾರ್ಮಿಕ ಪರ ಹೋರಾಟಗಳಲ್ಲಿ ಭಾಗವಹಿಸಿದರು, ಡಾ.ಲೋಹಿಯಾ ಅವರ ಪ್ರಭಾವಕ್ಕೆ ಒಳಗಾಗಿ ಸಮಾಜವಾದಿಯಾದರು.
ಉದ್ಯೋಗ ಅರಸಿ ಮುಂಬೈಗೆ ತೆರಳಿದ ಅವರು ಅನೇಕ ಹೋರಾಟಗಳಲ್ಲಿ ಭಾಗವಹಿಸಿದರು.
ಸಂಯುಕ್ತ ಸಮಾಜವಾದಿ ಪಕ್ಷದಿಂದ ಲೋಕಸಭೆಗೆ ಸ್ಪರ್ಧಿಸಿ ಕಾಂಗ್ರೆಸ್ನ ಎಸ್.ಕೆ.ಪಾಟೀಲ್ ಅವರನ್ನು ಸೋಲಿಸಿ ‘ಜೈಂಟ್ ಕಿಲ್ಲರ್’ (ದೈತ್ಯ ಸಂಹಾರಕ) ಎಂದು ಪ್ರಸಿದ್ಧರಾದರು. ೧೯೬೯ರಲ್ಲಿ ಇವರು ಸಂಯುಕ್ತ ಸಮಾಜವಾದಿ ಪಕ್ಷದ ಪ್ರಧಾನಕಾರ್ಯದರ್ಶಿಯಾದರು.
ಜನತಾ ದಳದ ಹಿರಿಯ ಸದಸ್ಯರಾಗಿದ್ದ ಅವರು ಮುಂದೆ ಸಮತಾ ಪಕ್ಷ ಸ್ಥಾಪಿಸಿದರು. ಅಖಿಲ ಭಾರತ ರೈಲ್ವೆ ಫೆಡರೇಷನ್ನ ಮುಖಂಡರಾಗಿ ೧೯೭೪ರಲ್ಲಿ ಅವರು ಸಂಘಟಿಸಿದ ಮುಷ್ಕರ ತೀವ್ರತರವಾಗಿದ್ದು ಇಂದಿರಾ ಗಾಂಧಿ ಅವರ ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿತು. ಈ ಹಿನ್ನೆಲೆಯಲ್ಲಿ ಇಂದಿರಾ ಅವರು ದೇಶದಲ್ಲಿ ಆಂತರಿಕ ತುರ್ತು ಪರಿಸ್ಥಿತಿ ಘೋಷಿಸಿ ಇವರನ್ನು ಬಂಧಿಸಿದರು. ೧೯೭೭ರಲ್ಲಿ ನಡೆದ
ಮಹಾಚುನಾವಣೆಯಲ್ಲಿ ಜಾರ್ಜ್ ಅವರು ಬಿಹಾರದ ಮುಜಫರ್ನಗರದಿಂದ ಸ್ಪರ್ಧಿಸಿ ೩ ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿ ಕೇಂದ್ರ ಮಂತ್ರಿಯಾದರು.
ಆ ಸಮಯದಲ್ಲಿ ಜಾರ್ಜ್ ಅವರು ವಿದೇಶಿ ವಿನಿಮಯ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತಂದಾಗ ಬಹುರಾಷ್ಟ್ರೀಯ ಕಂಪೆನಿಗಳಾದ ಐಬಿಎಂ ಮತ್ತು ಕೋಕಾಕೋಲ ಭಾರತದಿಂದ ಕಾಲ್ತೆಗೆದವು. ವಿ.ಪಿ.ಸಿಂಗ್ ಅವರ ಸರ್ಕಾರದಲ್ಲಿ ರೈಲ್ವೆ ಮಂತ್ರಿಯಾಗಿದ್ದ ಇವರು ಕೊಂಕಣ ರೈಲ್ವೆ ಯೋಜನೆಗೆ ಜೀವ ಕೊಟ್ಟರು. ಎನ್ಡಿಎ ಸರ್ಕಾರದ ಅವಧಿಯಲ್ಲಿ ರಕ್ಷಣಾಮಂತ್ರಿಯಾಗಿದ್ದರು. ಪ್ರಖರ ಭಾಷಣಗಳಿಗೆ ಹೆಸರಾಗಿರುವ ಇವರನ್ನು ಬುದ್ಧಿ ಜೀವಿ ಮತ್ತು ರಾಜಕಾರಣಿಯ ಸಂಗಮ ಎನ್ನಬಹುದು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.