ಪಾಷಾ ಸಲ್ಲಿಸಿರುವ ದೂರಿನಲ್ಲಿರುವ ಆರೋಪಗಳ ಕುರಿತು ತನಿಖೆ ನಡೆಸಿ ವರದಿ ಸಲ್ಲಿಸಲು ಗುರುವಾರದವರೆಗೆ ಕಾಲಾವಕಾಶ ನೀಡಿ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ (ಲೋಕಾಯುಕ್ತ) ವಿಶೇಷ ನ್ಯಾಯಾಲಯ ಈ ಹಿಂದೆ ಆದೇಶ ಹೊರಡಿಸಿತ್ತು. ಆದರೆ, ಗುರುವಾರ ನ್ಯಾಯಾಲಯಕ್ಕೆ ಹಾಜರಾದ ಲೋಕಾಯುಕ್ತ ಡಿವೈಎಸ್ಪಿ ಎಚ್.ಎಸ್.ಮಂಜುನಾಥ್ ಅವರು ತನಿಖೆಯ ಪ್ರಗತಿ ಕುರಿತು ವಿವರ ನೀಡಿದರು. ತನಿಖೆ ಪೂರ್ಣಗೊಳಿಸಲು ಹೆಚ್ಚಿನ ಕಾಲಾವಕಾಶ ನೀಡುವಂತೆಯೂ ಮನವಿ ಮಾಡಿದರು. ಇನ್ನೂ ಕೆಲ ಸ್ಥಳಗಳಿಗೆ ತನಿಖೆಗಾಗಿ ಭೇಟಿ ನೀಡಬೇಕಿರುವ ಹಿನ್ನೆಲೆಯಲ್ಲಿ ಕಾಲಾವಕಾಶ ಅಗತ್ಯವಿದೆ ಎಂದು ತನಿಖಾಧಿಕಾರಿ ನ್ಯಾಯಾಲಯಕ್ಕೆ ವಿವರಿಸಿದರು. ಅವರ ಬೇಡಿಕೆಯನ್ನು ಮಾನ್ಯ ಮಾಡಿದ ನ್ಯಾಯಾಧೀಶ ಎನ್.ಕೆ.ಸುಧೀಂದ್ರ ರಾವ್ ಅವರು, ಜ.31ರವರೆಗೆ ಗಡುವು ವಿಸ್ತರಿಸಿ ಆದೇಶ ಹೊರಡಿಸಿದರು.