ಬೆಂಗಳೂರು: ಶಿವಮೊಗ್ಗ ಜಿಲ್ಲೆ ಸಾಗರದಲ್ಲಿರುವ 7 ಸರ್ಕಾರಿ ವಿದ್ಯಾರ್ಥಿ ನಿಲಯಗಳಲ್ಲಿ ಪರ ಊರುಗಳ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲು ನಿರಾಕರಿಸುತ್ತಿರುವ ಆರೋಪ ಹೊತ್ತ ಸ್ಥಳೀಯ ಶಾಸಕ ಬೇಳೂರು ಗೋಪಾಲಕೃಷ್ಣ ಅವರಿಗೆ ಹೈಕೋರ್ಟ್ ಮಂಗಳವಾರ ನೋಟಿಸ್ ಜಾರಿಗೆ ಆದೇಶಿಸಿದೆ.
ಶಿವಮೊಗ್ಗದ ಎಚ್.ದಾನಪ್ಪ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಸರ್ಕಾರ, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೇರಿದಂತೆ ಇತರ ಪ್ರತಿವಾದಿಗಳಿಗೂ ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿಕ್ರಮ್ಜಿತ್ ಸೇನ್ ಹಾಗೂ ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಅವರನ್ನು ಒಳಗೊಂಡ ವಿಭಾಗೀಯ ಪೀಠ ನೋಟಿಸ್ ಜಾರಿಗೆ ಆದೇಶಿಸಿದೆ.
ಎಸ್ಸೆಸ್ಸೆಲ್ಸಿ ನಂತರದ ಕೋರ್ಸ್ಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಈ ನಿಲಯವಿದೆ. ಆದರೆ ಇದರ ಆಯ್ಕೆ ಸಮಿತಿ ಅಧ್ಯಕ್ಷರೂ ಆಗಿರುವ ಶಾಸಕ ಗೋಪಾಲಕೃಷ್ಣ ಸಾಗರದ ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶ ನೀಡುತ್ತಿದ್ದಾರೆ. ತಮ್ಮ ಊರಿನ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಸಿಗಲಿ ಎನ್ನುವುದು ಅವರ ಆಸೆ. ನಿಯಮದ ಪ್ರಕಾರ ಪರ ಊರಿನವರಿಗೆ ಆದ್ಯತೆ ನೀಡಬೇಕು. ಆದರೆ ಎಲ್ಲ ನಿಯಮಗಳನ್ನು ಗಾಳಿಗೆ ತೂರಿ ಶಾಸಕರು ಈ ರೀತಿ ಮಾಡುತ್ತಿದ್ದಾರೆ ಎನ್ನುವುದು ಅರ್ಜಿದಾರರ ಆರೋಪ.
ಹಿಂದಿನ ಪರೀಕ್ಷೆಗಳಲ್ಲಿ ಉತ್ತಮ ಅಂಕ ಗಳಿಸಿರುವವರಿಗೆ ಇಲ್ಲಿ ಆದ್ಯತೆ ನೀಡಬೇಕು. ಆದರೆ, ಕನಿಷ್ಠ ಅಂಕ ಗಳಿಸಿದ ಹಾಗೂ ವಸತಿಗೃಹದಿಂದ ಕಡಿಮೆ ಅಂತರದ ಊರುಗಳ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಾಗಿದೆ. ಶೇ 35 ಅಂಕ ಪಡೆದಿರುವ ವಿದ್ಯಾರ್ಥಿಗಳು ಪ್ರವೇಶ ದೊರಕಿಸಿಕೊಳ್ಳುವಲ್ಲಿ ಸಫಲರಾಗಿದ್ದಾರೆ.