ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀತಿ ಸಂಹಿತೆ ಉಲ್ಲಂಘಿಸಿದರೆ ಕ್ರಮ'

Last Updated 2 ಏಪ್ರಿಲ್ 2013, 8:44 IST
ಅಕ್ಷರ ಗಾತ್ರ

ಯಾದಗಿರಿ: ಚುನಾವಣಾ ಪ್ರಕ್ರಿಯೆ ಮುಗಿಯುವವರೆಗೆ ಚುನಾವಣೆಗೆ ಸ್ಪರ್ಧಿಸಿದ ಅಭ್ಯರ್ಥಿಗಳು ಮತ್ತು ರಾಜಕೀಯ ಪಕ್ಷಗಳು ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಎಚ್ಚರವಹಿಸಬೇಕು. ನೀತಿ ಸಂಹಿತೆ ಉಲ್ಲಂಘನೆ ಆದಲ್ಲಿ ಚುನಾವಣಾ ಆಯೋಗದ ನಿರ್ದೇಶನದಂತೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಪಿ. ರಾಜೇಂದ್ರ ಚೋಳನ್ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ವಿವಿಧ ರಾಜಕೀಯ ಪಕ್ಷಗಳ ಮುಖಂಡರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈ ಚುನಾವಣೆಯು ಮುಕ್ತ, ನ್ಯಾಯಸಮ್ಮತ ಹಾಗೂ ಪಾರದರ್ಶಕ ರೀತಿಯಲ್ಲಿ ನಡೆಸಲು ಈಗಾಗಲೇ ಚುನಾವಣಾ ನೀತಿ ಸಂಹಿತೆ ಮಾರ್ಚ್ 20 ರಿಂದ ಜಾರಿಗೊಳಿಸಲಾಗಿದೆ. ರಾಜಕೀಯ ಪಕ್ಷಗಳು ಚುನಾವಣಾ ಆಯೋಗದ ನಿರ್ದೇಶನಗಳನ್ನು ಪಾಲಿಸುವ ಮೂಲಕ ಅಗತ್ಯ ಸಹಕಾರ ನೀಡಬೇಕು ಎಂದು ತಿಳಿಸಿದರು.

ಯಾದಗಿರಿ ಜಿಲ್ಲೆಯಲ್ಲಿ 2013 ರ ಜನವರಿ 16 ರವರೆಗೆ ಒಟ್ಟು 7,82,242 ಮತದಾರರು ಮತದಾರರ ಪಟ್ಟಿಯಲ್ಲಿದ್ದಾರೆ. ಅವರಲ್ಲಿ 3,92,780 ಪುರುಷ ಮತದಾರರು ಹಾಗೂ 3,89,462 ಮಹಿಳಾ ಮತದಾರರು ಇದ್ದಾರೆ. 945 ಮುಖ್ಯ ಮತಗಟ್ಟೆಗಳು ಹಾಗೂ 28 ಆಕ್ಸಿಲರಿ ಮತಗಟ್ಟೆಗಳು ಸೇರಿದಂತೆ ಒಟ್ಟು 973 ಮತಗಟ್ಟೆಗಳನ್ನು ಸ್ಥಾಪಿಸುವ ಉದ್ದೇಶ ಹೊಂದಲಾಗಿದೆ. ಏಪ್ರಿಲ್ 7 ರೊಳಗೆ ಮತದಾರರ ಅಂತಿಮ ಪಟ್ಟಿ ಹಾಗೂ ಅಂತಿಮ ಮತದಾನದ ಕೇಂದ್ರಗಳ ಪಟ್ಟಿ ತಯಾರಿಸಲಾಗುತ್ತದೆ ಎಂದು ತಿಳಿಸಿದರು.

ವ್ಯವಸ್ಥಿತವಾಗಿ ಚುನಾವಣೆ ನಡೆಯಲು ಅಂತಿಮ ಮತದಾರರ ಪಟ್ಟಿ ತಯಾರಿಸಲಾಗುತ್ತಿದ್ದು, ಮತದಾರರ ಪಟ್ಟಿಯಲ್ಲಿ ಎರಡು ಕಡೆ ಹೆಸರು ಹೊಂದಿದ್ದಲ್ಲಿ ಒಂದು ಕಡೆ ಕಡಿತಗೊಳಿಸಬೇಕು. ಎರಡು ಕಡೆ ಇದ್ದು ಚುನಾವಣೆ ಸಂದರ್ಭದಲ್ಲಿ ಎರಡೂ ಕಡೆ ಮತದಾನ ಮಾಡುವಂತಹ ಚಟುವಟಿಕೆ ಕಂಡು ಬಂದಲ್ಲಿ ಅಂಥವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತದೆ. ಇದಕ್ಕಾಗಿ ರಾಜಕೀಯ ಪಕ್ಷಗಳ ಮುಖಂಡರು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದು ಹೇಳಿದರು.   

ಅಭ್ಯರ್ಥಿಯು ವಿಧಾನಸಭೆ ಚುನಾವಣೆಗಾಗಿ ಗರಿಷ್ಠ ರೂ. 16 ಲಕ್ಷ ಖರ್ಚು ಮಾಡಬಹುದಾಗಿದೆ. ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಯು ತಮ್ಮ ಹೆಸರಿನಲ್ಲಿರುವ ಬ್ಯಾಂಕ್ ಖಾತೆಯ ಪಾಸ್ ಬುಕ್ ಪ್ರತಿಯನ್ನು ಚುನಾವಣಾಧಿಕಾರಿಗೆ ಕೊಡಬೇಕು. ವಿದ್ಯುನ್ಮಾನ ಮತ ಯಂತ್ರಗಳನ್ನು ವಿಧಾನ ಸಭಾ ಕ್ಷೇತ್ರವಾರು ಹಾಗೂ ಮತಗಟ್ಟೆವಾರು ರ‌್ಯಾಂಡ್‌ಮೈಜೇಶನ್ ಮಾಡುವ ಸಂದರ್ಭದಲ್ಲಿ ಅಭ್ಯರ್ಥಿಗಳು ಅಥವಾ ರಾಜಕೀಯ ಪಕ್ಷದವರು ಹಾಜರಿರಬಹುದು. ರಾಜಕೀಯ ಪಕ್ಷ ಅಥವಾ ಅಭ್ಯರ್ಥಿಯಾಗಲಿ ಸಭೆ, ಸಮಾರಂಭ ಮೆರವಣಿಗೆ ಇತ್ಯಾದಿ ಚುನಾವಣೆ ಪ್ರಚಾರ ಮತ್ತು ವಾಹನಗಳನ್ನು ಉಪಯೋಗಿಸಲು ಸಂಬಂಧಪಟ್ಟ ಚುನಾವಣಾಧಿಕಾರಿಯಿಂದ ಪೂರ್ವಾನುಮತಿ ಪಡೆಯಬೇಕು ಎಂದು ಹೇಳಿದರು.

ರಾಜಕೀಯ ಪಕ್ಷಗಳು ಅಥವಾ ಸ್ಪರ್ಧಿಸುವ ಅಭ್ಯರ್ಥಿ ಚುನಾವಣೆ ಪ್ರಚಾರಕ್ಕಾಗಿ ಕರಪತ್ರ, ಪೋಸ್ಟರ್ ಮುದ್ರಿಸುವುದು, ದೃಶ್ಯ ಮಾಧ್ಯಮದಲ್ಲಿ ಪ್ರಚಾರ ಪಡಿಸಲು ಜಿಲ್ಲಾ ಎಂಸಿಎಂಸಿ ಸಮಿತಿಯಿಂದ ಪೂರ್ವಾನುಮತಿ ಪಡೆಯಬೇಕು. ದೂರುಗಳನ್ನು ಸ್ವೀಕರಿಸಲು ಚುನಾವಣಾ ಕಂಟ್ರೋಲ್ ರೂಂ ಸ್ಥಾಪಿಸಲಾಗಿದೆ. ಜಿಲ್ಲಾ ಕಂಟ್ರೋಲ್ ರೂಂ. (ಮೊ.ಸಂ. 9342646803, 08473-253710, 253700), ಫ್ಯಾಕ್ಸ್ 253701,  ಸಹಾಯಕ ಆಯುಕ್ತರ ಕಚೇರಿ (ಮೋ.ಸಂ.  7429228404, 08473-252688), ಫ್ಯಾಕ್ಸ್ 252166, ಯಾದಗಿರಿ ತಹಸೀಲ್ದಾರ ಕಚೇರಿ (ಮೊ.ಸಂ. 9845612361, 08473-253611), ಶಹಾಪುರ ತಹಸೀಲ್ದಾರ ಕಚೇರಿ (ಮೊ.ಸಂ. 9448509616 08479-243321), ಸುರಪುರ ತಹಸೀಲ್ದಾರ ಕಚೇರಿ (ಮೊ.ಸಂ 8050117173, 08443-256043) ಸಹಾಯವಾಣಿಗಳಿಗೆ ಕರೆ ಮಾಡಿ ದೂರು ಸಲ್ಲಿಸಬಹುದಾಗಿದೆ ಎಂದು ತಿಳಿಸಿದರು.

ಏಪ್ರಿಲ್ 10 ರಂದು ಚುನಾವಣಾ ಅಧಿಸೂಚನೆ ಹೊರಬೀಳಲಿದೆ. ಏಪ್ರಿಲ್ 10 ರಿಂದ ಏಪ್ರಿಲ್ 17 ರವರೆಗೆ ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆಯವರೆಗೆ (ಸಾರ್ವತ್ರಿಕ ರಜಾ ದಿನ ಹೊರತುಪಡಿಸಿ) ನಾಮಪತ್ರ ಸ್ವಿಕರಿಸಲಾಗುತ್ತದೆ. ಏಪ್ರಿಲ್ 18 ರಂದು ಬೆಳಿಗ್ಗೆ 11 ಗಂಟೆಯಿಂದ ನಾಮಪತ್ರ ಪರಿಶೀಲಿಸಲಾಗುತ್ತದೆ. ಏಪ್ರಿಲ್ 20 ರಂದು ಮಧ್ಯಾಹ್ನ 3 ಗಂಟೆಯವರೆಗೆ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ಕೊನೆಯ ದಿನವಾಗಿದೆ.  ಮೇ 5 ರಂದು ಮತದಾನ ನಡೆಯಲಿದ್ದು, ಬೆಳಿಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಡೆಯಲಿದೆ. ಮತ ಎಣಿಕೆಯು ಮೇ 8 ರಂದು ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಲಿದೆ.

ಈಗಾಗಲೇ ನಾಲ್ವರು ಚುನಾವಣಾಧಿಕಾರಿಗಳನ್ನು ನೇಮಿಸಲಾಗಿದೆ.  ಸುರಪುರರ, ವಿಧಾನಸಭಾ ಮತಕ್ಷೇತ್ರಕ್ಕೆ ಸಂಬಂಧಪಟ್ಟಂತೆ  ಸುರಪುರ ತಹಸೀಲ್ದಾರ ಕಾರ್ಯಾಲಯದಲ್ಲಿ ನಾಮಪತ್ರವನ್ನು ಸ್ವೀಕರಿಸಲಿದ್ದು, ಇಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಬಸವರಾಜ (ಮೊ.ಸಂ. 9480879504,)  ಅವರನ್ನು ಚುನಾವಣಾ ಅಧಿಕಾರಿಯಾಗಿ ನೇಮಿಸಲಾಗಿದೆ. ಸಹಾಯಕ ಚುನಾವಣಾ ಅಧಿಕಾರಿಯಾಗಿ ಸುರಪುರ ತಹಸೀಲ್ದಾರ ಗೌಸೂದ್ದೀನ್ ಅವರನ್ನು ನೇಮಕ ಮಾಡಲಾಗಿದೆ.

ಶಹಾಪೂರ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ಶಹಾಪುರ ತಹಸೀಲ್ದಾರ ಕಾರ್ಯಾಲಯದಲ್ಲಿ ನಾಮಪತ್ರ ಸ್ವೀಕರಿಸಲಾಗುತ್ತದೆ. ಜಿಲ್ಲಾ ಜಲಾನಯನ ಅಭಿವೃದ್ಧಿ ಅಧಿಕಾರಿ ಜಿಯಾವುಲ್ಲಾ ಕೆ. (ಮೊ.ಸಂ. 9741258220) ಅವರನ್ನು ಚುನಾವಣಾಧಿಕಾರಿಯಾಗಿ ಹಾಗೂ ಮತ್ತು ತಹಸೀಲ್ದಾರ ಪರಮೇಶ್ವರ ಸ್ವಾಮಿ ಅವರನ್ನು ಸಹಾಯಕ ಚುನಾವಣಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಯಾದಗಿರಿ ವಿಧಾನ ಸಭಾ ಮತಕ್ಷೇತ್ರಕ್ಕೆ ಸಂಬಂಧಪಟ್ಟಂತೆ  ಯಾದಗಿರಿ ಸಹಾಯಕ ಆಯುಕ್ತರ ಕಾರ್ಯಾಲಯದಲ್ಲಿ ನಾಮಪತ್ರ ಸ್ವೀಕರಿಸಲಿದ್ದು, ಸಹಾಯಕ ಆಯುಕ್ತ  ಬಿ.ಪಿ. ವಿಜಯ (ಮೊ.ಸಂ.  8884554706) ಚುನಾವಣಾಧಿಕಾರಿಯಾಗಿ ಹಾಗೂ ಯಾದಗಿರಿ ತಹಸೀಲ್ದಾರ ಕೆ. ಮಥಾಯಿ (ಮೊ.ಸಂ. 9448214650 ) ಅವರನ್ನು ಸಹಾಯಕ ಚುನಾವಣಾಧಿಕಾರಿಯಾಗಿ ನೇಮಕ ಮಾಡಲಾಗಿದೆ.

ಗುರುಮಠಕಲ್ ವಿಧಾನಸಭಾ ಮತಕ್ಷೇತ್ರಕ್ಕೆ ಸಂಬಂಧಪಟ್ಟಂತೆ ಗುರುಮಠಕಲ್ ಪಟ್ಟಣ ಪಂಚಾಯಿತಿ ಕಾರ್ಯಾಲಯದಲ್ಲಿ ನಾಮಪತ್ರ ಸ್ವೀಕರಿಸಲಾಗುತ್ತದೆ. ಪಶು ಸಂಗೋಪನಾ ಇಲಾಖೆ ಉಪನಿರ್ದೇಶಕ ಡಾ. ಎಂ.ಟಿ. ಮಂಜುನಾಥ (ಮೊ.ಸಂ. 8123900309 ) ಅವರನ್ನು ಚುನಾವಣಾಧಿಕಾರಿಯಾಗಿ, ಯಾದಗಿರಿ ತಹಸೀಲ್ದಾರ ಕೆ. ಮಥಾಯಿ  ಹಾಗೂ ಗುರುಮಠಕಲ್ ವಿಶೇಷ ತಹಸೀಲ್ದಾರ್ ಮಲ್ಲಿಕಾರ್ಜುನರಡ್ಡಿ ಪಾಟೀಲ ( ಮೊ.ಸಂ. 9611502355 ) ಅವರನ್ನು   ಸಹಾಯಕ ಚುನಾವಣಾಧಿಕಾರಿಯಾಗಿ ನೇಮಿಸಲಾಗಿದೆ ಎಂದು ವಿವರಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಜಹೀರಾ ನಸೀಮ್, ಸ್ವಾಗತಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT