ಚಿಕ್ಕಬಳ್ಳಾಪುರ: ಎತ್ತಿನಹೊಳೆ ಮತ್ತು ಪರಮಶಿವಯ್ಯ ವರದಿಯಾಧಾರಿತ ನೀರಾವರಿ ಯೋಜನೆ ಅನುಷ್ಠಾನಗೊಳಿಸಲು ಸರ್ಕಾರ ಬದ್ಧವಾಗಿದ್ದು, ವಿಸ್ತೃತಾ ಯೋಜನಾ ವರದಿಯಾಧರಿಸಿ ಶೀಘ್ರವೇ ನೀರಾವರಿ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ
ಘೋಷಿಸಿದರು.
ನಗರದ ನಂದಿರಂಗಮಂದಿರದಲ್ಲಿ ಶುಕ್ರವಾರ ನಡೆದ ಜಿಲ್ಲಾಡಳಿತ ಭವನ, ಒಳಾಂಗಣ ಕ್ರೀಡಾಂಗಣದ ಉದ್ಘಾಟನೆ, ಚಿಕ್ಕಬಳ್ಳಾಪುರ ಕೆಎಸ್ಆರ್ಟಿಸಿ ಬಸ್ ನಿಲ್ದಾಣ, ಚಿಂತಾಮಣಿ 1 ಮತ್ತು 2ನೇ ಮಹಡಿಯ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ನೀರಿಗಾಗಿ ಜಿಲ್ಲೆಯ ಜನರು ಸಲ್ಲಿಸಿದ ಮನವಿಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಲಾಗುವುದು ಎಂದರು.
ಚಿಕ್ಕಬಳ್ಳಾಪುರ–ಕೋಲಾರ ಮುಂತಾದ ಬಯಲುಸೀಮೆ ಜಿಲ್ಲೆಗಳು ನೀರಿನ ತೀವ್ರ ಸಮಸ್ಯೆ ಎದುರಿಸುತ್ತಿರುವ ಬಗ್ಗೆ ರಾಜ್ಯ ಸರ್ಕಾರಕ್ಕೆ ಅರಿವಿದೆ. ನೀರಾವರಿ ಯೋಜನೆ ಜಾರಿಗೊಳಿಸಲು ಪ್ರಥಮ ಆದ್ಯತೆ ನೀಡುತ್ತಿದೆ. ಅದಕ್ಕಾಗಿ ಬಜೆಟ್ನಲ್ಲಿ ಅನುದಾನ ಕೂಡ ಮೀಸಲಿಡಲಾಗಿದೆ ಎಂದು ಹೇಳಿದರು.
ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಹೈಟೆಕ್ ಸರ್ಕಾರಿ ಆಸ್ಪತ್ರೆ ಹಾಸಿಗೆಗಳ ಸಾಮರ್ಥ್ಯವನ್ನು 300ಕ್ಕೆ ಏರಿಸಿ, ಮುಂದಿನ ವರ್ಷ ಜಿಲ್ಲೆಗೊಂದು ವೈದ್ಯಕೀಯ ಕಾಲೇಜು ಘೋಷಿಸಲಾಗುವುದು ಎಂದರು.
ಕರ್ನಾಟಕ ಹಾಲು ಮಹಾಮಂಡಳಿಯ ಮೆಗಾ ಡೇರಿ ನಿರ್ಮಾಣಕ್ಕೆ ಬಾಕಿಯಿರುವ ಅನುದಾನವನ್ನೂ ಸಹ ಹಂತಹಂತವಾಗಿ ಬಿಡುಗಡೆ ಮಾಡಲಾಗುವುದು ಎಂದು ಅವರು ತಿಳಿಸಿದರು.
ಕೇಂದ್ರ ಸಚಿವರಾದ ಎಂ.ವೀರಪ್ಪ ಮೊಯಿಲಿ, ಕೆ.ಎಚ್.ಮುನಿಯಪ್ಪ, ಸಚಿವರಾದ ವಿ.ಶ್ರೀನಿವಾಸ್ ಪ್ರಸಾದ್, ಎಚ್.ಕೆ.ಪಾಟೀಲ್, ದಿನೇಶ್ ಗುಂಡೂರಾವ್, ರಾಮಲಿಂಗಾರೆಡ್ಡಿ, ಶಾಸಕರಾದ ಎನ್.ಎಚ್.ಶಿವಶಂಕರ ರೆಡ್ಡಿ, ಡಾ.ಕೆ.ಸುಧಾಕರ್, ಜೆ.ಕೆ.ಕೃಷ್ಣಾರೆಡ್ಡಿ, ಎಂ.ರಾಜಣ್ಣ ಮತ್ತಿತರರು ಉಪಸ್ಥಿತರಿದ್ದರು.