ವಿಜಾಪುರ: ಕೃಷ್ಣಾ ನ್ಯಾಯಮಂಡಳಿ ತೀರ್ಪಿನ ಹಿನ್ನೆಲೆಯಲ್ಲಿ ಆಗಬೇಕಿರುವ ಕ್ರಮಗಳ ಕುರಿತು ಚರ್ಚಿಸಲು ಜಲಸಂಪನ್ಮೂಲ ಸಚಿವರ ಸಮ್ಮುಖದಲ್ಲಿ ಶೀಘ್ರವೇ ಅವಳಿ ಜಿಲ್ಲೆಯ ಜನಪ್ರತಿನಿಧಿಗಳ ಸಭೆ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಹೇಳಿದರು.ಬಬಲೇಶ್ವರದಲ್ಲಿ ನಡೆದ ಜನಸ್ಪಂದನ ಸಭೆಯಲ್ಲಿ ಶಾಸಕ ಎಂ.ಬಿ. ಪಾಟೀಲರ ಮನವಿಗೆ ಸ್ಪಂದಿಸಿದ ಸಚಿವರು, ಬಜೆಟ್ ಅಧಿವೇಶನಕ್ಕೂ ಮುನ್ನ ಈ ಸಭೆ ಕರೆಯುವ ಭರವಸೆ ನೀಡಿದರು.
ವಿಜನ್-2020 ಯೋಜನೆಯ ಅಡಿಯಲ್ಲಿ ವಿಜಾಪುರ ಜಿಲ್ಲೆಗೆ ಹೆಚ್ಚುವರಿಯಾಗಿ 5 ಸಾವಿರ ಕೋಟಿ ರೂಪಾಯಿ ನೀಡಲು ಹಾಗೂ ಈ ಬಜೆಟ್ನಲ್ಲಿ ಜಿಲ್ಲೆಗೆ ವಿಶೇಷ ಪ್ಯಾಕೇಜ್ ನೀಡಲು ಮುಖ್ಯಮಂತ್ರಿಗಳು ಸಮ್ಮತಿಸಿದ್ದಾರೆ. ಅದಕ್ಕೆ ಪೂರಕವಾಗಿ 150 ಕೋಟಿ ರೂಪಾಯಿ ಮೊತ್ತದ ಯೋಜನೆಗಳಿಗೆ ಅನುಮತಿ ನೀಡಿದ್ದಾರೆ ಎಂದರು.ಡೋಣಿ ನದಿ ಹೂಳೆತ್ತಲು ಹಾಗೂ ಜವಳು-ಸವಳು ತೆಗೆಯಲು ಬಜೆಟ್ನಲ್ಲಿ ಹಣ ನೀಡಲಾಗುವುದು. ವಿಜಾಪುರ ಜಿಲ್ಲೆಯ ಹನಿ ನೀರಾವರಿಗೆ ಶೇ.100ರಷ್ಟು ಸಹಾಯಧನ ನೀಡಲಾಗುವುದು ಎಂದರು.
ಶಾಸಕ ಎಂ.ಬಿ. ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಬಬಲೇಶ್ವರದ ಡಾ. ಮಹಾದೇವ ಶಿವಾಚಾರ್ಯರು, ವಿಜಾಪುರದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಶಾಸಕರಾದ ಎಸ್.ಆರ್. ಪಾಟೀಲ, ಜಿ.ಎಸ್. ನ್ಯಾಮಗೌಡ, ವಿಠ್ಠಲ ಕಟಕಧೋಂಡ, ಜನಪ್ರತಿನಿಧಿಗಳು ವೇದಿಕೆಯಲ್ಲಿದ್ದರು.