ತುಮಕೂರು: ಕುಡಿಯುವ ನೀರು ಸೇರಿದಂತೆ ಮೂಲಸೌಲಭ್ಯ ಕಲ್ಪಿಸಬೇಕೆಂದು ಆಗ್ರಹಿಸಿ ನಗರದ ಮರಳೂರು ದಿಣ್ಣೆ, ಜನತಾ ಕಾಲೊನಿ ನಿವಾಸಿಗಳು ಹಜರತ್ ಟಿಪ್ಪು ಸುಲ್ತಾನ್ ವೇದಿಕೆ ನೇತೃತ್ವದಲ್ಲಿ ನಗರಸಭೆ ಕಚೇರಿಗೆ ಶನಿವಾರ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ನಗರದ 29ನೇ ವಾರ್ಡ್ನಲ್ಲಿ ಸಮರ್ಪಕವಾಗಿ ನೀರು ಸರಬರಾಜು ಮಾಡುತ್ತಿಲ್ಲ. ಇಲ್ಲಿ 8 ಕೊಳವೆ ಬಾವಿ ಕೊರೆಯಲಾಗಿದೆ. ಆದರೆ ಇದುವರೆಗೂ ವಿದ್ಯುತ್ ಸಂಪರ್ಕ ಕಲ್ಪಿಸಿಲ್ಲ. ಮೋಟಾರ್ ಪಂಪ್ ಅಳವಡಿಸಲು ಕ್ರಮ ಕೈಗೊಂಡಿಲ್ಲ. ಈ ಬಗ್ಗೆ ನಗರಸಭೆ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಬಡಾವಣೆಗೆ ಸಮರ್ಪಕ ಮೂಲ ಸೌಲಭ್ಯ ಕಲ್ಪಿಸಿಲ್ಲ. ಎಲ್ಲೆಂದರಲ್ಲಿ ಕಸದ ರಾಶಿ ಬಿದ್ದಿದೆ. ಇದರಿಂದ ನಿವಾಸಿಗಳ ಆರೋಗ್ಯದ ಮೇಲೆ ದುಷ್ಪಾರಿಣಾಮ ಬೀರುತ್ತಿದೆ. ನಗರದಿಂದ ದೂರದಲ್ಲಿರುವ ಇಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಇಲ್ಲ.
ಅಲ್ಲದೆ ನಗರ ಸಾರಿಗೆ ಇದ್ದರೂ ಬಸ್ ನಿಲ್ದಾಣ ಇಲ್ಲ. ಜನತೆ ಮಳೆ, ಬಿಸಿಲಿನಲ್ಲೇ ಬಸ್ಗಾಗಿ ಕಾದು ನಿಲ್ಲಬೇಕಾಗಿದೆ. ಈ ಬಗ್ಗೆ ಪರಿಶೀಲಿಸಿ ಮೂಲಸೌಲಭ್ಯ ಕಲ್ಪಿಸಲು ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ನಗರಸಭೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಹಜರತ್ ಟಿಪ್ಪು ಸುಲ್ತಾನ್ ವೇದಿಕೆ ಅಧ್ಯಕ್ಷ ಎಸ್.ಸಾದಿಕ್ಪಾಷಾ, ಪ್ರಧಾನ ಕಾರ್ಯದರ್ಶಿ ಅಸ್ಗರ್ ಅವರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.