ಚಿಕ್ಕಮಗಳೂರು: ಕುಡಿಯುವ ನೀರಿಗೆ ಸಮಸ್ಯೆ ಬಗೆಹರಿಸಲು ಆದ್ಯತೆ ನೀಡಲಾಗುವುದು ಎಂದು ಜಿಲ್ಲಾ ಪಂಚಾಯಿತಿ ನೂತನ ಅಧ್ಯಕ್ಷೆ ರೇಖಾಹುಲಿಯಪ್ಪಗೌಡ ತಿಳಿಸಿದರು.
ಅಧಿಕಾರ ಸ್ವೀಕರಿಸಿ ಬುಧವಾರ ಮಾತನಾಡಿದ ಅವರು, ಇದೇ ಗುರುವಾರ ಅಧಿಕಾರಿಗಳ ಸಭೆ ನಡೆಸಲಾಗು ವುದು. ಜಿಲ್ಲೆಯ ಇಬ್ಬರು ಸಚಿವರ ಸಹಕಾರದೊಂದಿಗೆ ಸರ್ಕಾರದಿಂದ ಹೆಚ್ಚಿನ ಅನುದಾನ ಬಿಡುಗಡೆಮಾಡಿ ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಳ್ಳಲಾಗುವುದು ಎಂದರು.
ಜಿಲ್ಲೆಯ ಕಡೂರು, ತರೀಕೆರೆ ಮತ್ತು ಚಿಕ್ಕಮಗಳೂರು ತಾಲ್ಲೂಕಿನ ಕೆಲವು ಭಾಗಗಳಲ್ಲಿ ಬರಪರಿಸ್ಥಿತಿ ಇದೆ. ಜನ, ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಮೇವಿನ ಸಮಸ್ಯೆ ತಲೆದೋರದಂತೆ ಎಚ್ಚರವಹಿಸಿ ಕೆಲಸ ನಿರ್ವಹಿಸಲಾಗುವುದು ಎಂದು ಹೇಳಿದರು.
ಸರ್ಕಾರದಿಂದ ದೊರೆಯುವ ಸಲವತ್ತುಗಳನ್ನು ಸಕಾಲದಲ್ಲಿ ಸಾರ್ವಜನಿಕರಿಗೆ ದೊರಕುವಂತೆ ನೋಡಿಕೊಳ್ಳುವ ಭರವಸೆ ನೀಡಿದರು.ಜಿಲ್ಲೆಯಲ್ಲಿ ಅಭಿವೃದ್ಧಿ ಕೆಲಸಗಳಿಗೆ ನಿಗದಿಪಡಿಸಿರುವ ಗುರಿಯನ್ನು ಸಾಧಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು. ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆಯಾಗಿ ಮಾಲಿನಿಬಾಯಿ ರಾಜನಾಯ್ಕ ಇದೇ ಸಂದರ್ಭ ಅಧಿಕಾರ ಸ್ವೀಕರಿಸಿದರು.