ಉಜಿರೆ: ದಕ್ಷಿಣ ಕನ್ನಡ ಜಿಲ್ಲೆಯ ಜೀವನದಿ ನೇತ್ರಾವತಿ ತಿರುವು ಯೋಜನೆಗೆ ಅವಕಾಶ ನೀಡುವುದಿಲ್ಲ ಎಂದು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳು ಸಂಕಲ್ಪ ವ್ಯಕ್ತಪಡಿಸಿದರು.
ನಾಗರಿಕ ಸೇವಾ ಟ್ರಸ್ಟ್ ನೇತೃತ್ವದಲ್ಲಿ ಗುರುವಾಯನಕೆರೆಯಲ್ಲಿ ಬುಧವಾರ ಏರ್ಪಡಿಸಿದ ಚುನಾವಣಾ ಅಭ್ಯರ್ಥಿಗಳೊಂದಿಗೆ ಮುಖಾಮುಖಿ ಕಾರ್ಯಕ್ರಮದಲ್ಲಿ ಅವರು ನಿಲುವು ವ್ಯಕ್ತಪಡಿಸಿದರು. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶಾಸಕ ಕೆ.ವಸಂತ ಬಂಗೇರ, ಸಿಪಿಐಎಂ ಅಭ್ಯರ್ಥಿ ಬಿ.ಎಂ ಭಟ್ ಮತ್ತು ಬಿಜೆಪಿ ಅಭ್ಯರ್ಥಿ ಪರವಾಗಿ ಪ್ರಭಾಕರ ಶೆಟ್ಟಿ ಉಪ್ಪಡ್ಕ ಭಾಗವಹಿಸಿದ್ದರು.
ಎಂಡೋಸಲ್ಫಾನ್ ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸಿ ಸಂತ್ರಸ್ತರಿಗೆ ಸೂಕ್ತ ಪರಿಹಾರ ಒದಗಿಸಲು ತಾವು ಪ್ರಯತ್ನಿಸುವುದಾಗಿ ಭರವಸೆ ನೀಡಿದರು. ನಿವೇಶನ ರಹಿತರು, ಅರಣ್ಯವಾಸಿಗಳು ಹಾಗೂ ಕೃಷಿ ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ಸಕಾಲಿಕವಾಗಿ ಸ್ಪಂದಿಸುವುದಾಗಿ ಅವರು ಭರವಸೆ ನೀಡಿದರು.
ನಾಗರಿಕ ಸೇವಾ ಟ್ರಸ್ಟ್ ಅಧ್ಯಕ್ಷ ಕೆ.ಸೋಮನಾಥ ನಾಯಕ್, ವಿದ್ಯಾನಾಯಕ್, ನಾರಾಯಣ ಕಿಲಂಗೋಡಿ, ಜಯಪ್ರಕಾಶ್ ಭಟ್ ಉಪಸ್ಥಿತರಿದ್ದರು.