ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿನ ಬರ ಪರಿಸ್ಥಿತಿ ಅಧ್ಯಯನ ಮಾಡಲು ಸೋಮವಾರ ಮೂರು ತಾಲ್ಲೂಕುಗಳಿಗೆ ಭೇಟಿ ನೀಡಬೇಕಿದ್ದ ಕೇಂದ್ರ ಕೃಷಿ ಆಯೋಗದ ಕೃಷಿ ಜಂಟಿ ಕಾರ್ಯದರ್ಶಿ ಬಿ.ಆರ್.ಸಿನ್ಹಾ, ಕೃಷಿ ಮತ್ತು ಸಹಕಾರ ಇಲಾಖೆ ನಿರ್ದೇಶಕ ಚೌಧರಿ ನೇತೃತ್ವದ ಕೇಂದ್ರ ಬರ ಅಧ್ಯಯನ ತಂಡವು ತಾಲ್ಲೂಕಿನ ಕೆಲ ಗ್ರಾಮಗಳಿಗೆ ಭೇಟಿ ನೀಡಿತು.
ಚಿಂತಾಮಣಿ ಮತ್ತು ಚಿಕ್ಕಬಳ್ಳಾಪುರ ತಾಲ್ಲೂಕುಗಳ ಗ್ರಾಮಗಳಿಗೆ ಭೇಟಿ ನೀಡಲು ಸಾಧ್ಯವಾಗಲಿಲ್ಲ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡು ಜಿಲ್ಲೆಯ ಸಮಗ್ರ ಮಾಹಿತಿಯನ್ನು ಜಿಲ್ಲಾಧಿಕಾರಿಗಳಿಂದ ಪಡೆಯಿತು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಬಿ.ಆರ್.ಸಿನ್ಹಾ. ‘ಯಾವುದೇ ಜಿಲ್ಲೆಯಾಗಲಿ ಬರ ಪರಿಸ್ಥಿತಿ ಎದುರಿಸಲು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು. ನಮ್ಮಲ್ಲಿರುವ ನೈಸರ್ಗಿಕ ಸಂಪನ್ಮೂಲ ಕಾಪಾಡಿದರೆ ಬರಪರಿಸ್ಥಿತಿ ಸುಧಾರಿಸಬಹುದು’ ಎಂದರು.
‘ನಾವು ನಮ್ಮ ಬೆಳೆ ಪದ್ಧತಿಗಳನ್ನು ಸುಧಾರಿಸಿಕೊಳ್ಳಬೇಕಿದೆ. ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಕುಸಿದಿದ್ದು, ಟ್ಯಾಂಕರ್ ಮೂಲಕ ಕುಡಿಯುವ ನೀರನ್ನು ಸರಬರಾಜು ಮಾಡಬಹುದು. ನಾವು ಆಧುನಿಕ ಬೇಸಾಯ ಕ್ರಮಗಳನ್ನು ಅಳವಡಿಸಿ ಮಳೆ ನೀರು ಶೇಖರಣೆಗೆ ಸಹ ಗಮನ ಕೊಡಬೇಕಾಗಿದೆ’ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ. ಆರ್.ವಿಶಾಲ್, ‘ಜಿಲ್ಲೆಯಲ್ಲಿ ಒಟ್ಟು ಸರಾಸರಿ 5.78.9 ಮಿ.ಮಿ. ಮಳೆಯಾಗಿದ್ದು, ಸಾಧಾರಣ ಮಳೆಗಿಂತ ಶೇ 23ರಷ್ಟು ಕೊರತೆ ಉಂಟಾಗಿದೆ. ಜಿಲ್ಲೆಯಲ್ಲಿ ಮೇವಿನ ದಾಸ್ತಾನು ಇದ್ದು, ರೈತರಿಗೆ ಮಿನಿ ಕಿಟ್ಗಳನ್ನು ವಿತರಿಸಲಾಗಿದೆ. ಕಾಲುಬಾಯಿ ರೋಗದಿಂದ ಸತ್ತ ರಾಸುಗಳ ಕುಟುಂಬದವರಿಗೆ ಪರಿಹಾರ ನೀಡಲಾಗಿದೆ. ಈ ಬಾರಿ ಬರ ಪರಿಹಾರ ಮೊತ್ತವು ಜಿಲ್ಲೆಗೆ ಬಂದಿದ್ದು, 2013-–14ರಲ್ಲಿ ₨ 1.90 ಕೋಟಿ ಬಿಡುಗಡೆಯಾಗಿದೆ. ಜಿಲ್ಲೆಯಲ್ಲಿ ಹಿಂದಿನ ಉಳಿಕೆ ಹಣ ₨ 5.77 ಕೋಟಿ ಇದೆ. ಇದರಲ್ಲಿ ಕುಡಿಯುವ ನೀರು ಇತರ ರಿಪೇರಿ ವೆಚ್ಚ, ಮೇವು, ಮಿನಿ ಕಿಟ್ಗಳು, ಔಷಧಿಗಳಿಗೆ ಒಟ್ಟು ₨ 4.79 ಕೋಟಿ ರೂಪಾಯಿ ಖರ್ಚಾಗಿದೆ. ಜಿಲ್ಲೆಯಲ್ಲಿ ಬರಪರಿಸ್ಥಿತಿಯಿದ್ದು, ಇದನ್ನು ಎದುರಿಸಲು ಕೇಂದ್ರದಿಂದ ನೆರವು ಬೇಕಿದೆ ಎಂದವರು ತಿಳಿಸಿದರು.
ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಎ.ರಾಮದಾಸ್, ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕ ಡಾ. ಎಲ್.ಪ್ರಕಾಶ್ ಸೇರಿದಂತೆ ಜಿಲ್ಲಾಮಟ್ದದ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.