ಬೆಂಗಳೂರು: ಲೋಕಾಯುಕ್ತ ಹುದ್ದೆಗೆ ಶಿಫಾರಸು ಮಾಡಲಾಗಿರುವ ನ್ಯಾಯಮೂರ್ತಿ ಎಸ್.ಆರ್. ನಾಯಕ ಅವರ ಹೆಸರನ್ನು ಕೈಬಿಡಬೇಕು ಹಾಗೂ ಅವರ ವಿರುದ್ಧ ಎಫ್ಐಆರ್ ದಾಖಲಿಸಬೇಕು ಎಂದು ಆಗ್ರಹಿಸಿ, ಜನಾಧಿಕಾರ ಸಂಘರ್ಷ ಸಮಿತಿ ಸದಸ್ಯರು ನಗರದ ಪುರಭವನದ ಎದುರು ಭಾನುವಾರ ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಸಂಘದ ಸಹ ಅಧ್ಯಕ್ಷ ಆದರ್ಶ ಅಯ್ಯರ್, ‘ನಾಯಕ ಅವರ ಮೇಲೆ ಕೆಲ ಆರೋಪಗಳಿದ್ದು, ಈ ಸಂಬಂಧ ಲೋಕಾಯುಕ್ತ ಎಡಿಜಿಪಿಗೆ ಜ. 13ರಂದು ದೂರು ನೀಡಿದ್ದೇವೆ. ಆದರೆ ಇದುವರೆಗೂ ಎಫ್ಐಆರ್ ದಾಖಲಿಸಿಲ್ಲ’ ಎಂದು ಅವರು ಈ ವೇಳೆ ಆರೋಪಿಸಿದರು.
‘ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ನಾಯಕ್ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು. ಅಲ್ಲದೆ, ರಾಜ್ಯ ಕಾನೂನು ಆಯೋಗದ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಬೇಕು. ಯಾವುದೇ ಕಾರಣಕ್ಕೂ ಅವರನ್ನು ಲೋಕಾಯುಕ್ತ ಹುದ್ದೆಗೆ ನೇಮಿಸಬಾರದು’ ಎಂದು ಒತ್ತಾಯಿಸಿದರು.