ಬೆಂಗಳೂರು: ನ್ಯಾಯಾಲಯದ ಆದೇಶವಿದ್ದರೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯು (ಕೆಎಸ್ಸಿಎ) ಕೆಲವು ಕಾರ್ಮಿಕರಿಗೆ ಸಮಾನ ವೇತನ ನೀಡುತ್ತಿಲ್ಲ ಎಂದು ದೂರಿ ಸಂಸ್ಥೆಯ ಅಧ್ಯಕ್ಷ ಅನಿಲ್ ಕುಂಬ್ಳೆ ಮತ್ತು ಕಾರ್ಯದರ್ಶಿ ಜಾವಗಲ್ ಶ್ರೀನಾಥ್ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲಾಗಿದೆ. ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎನ್.ಕೆ. ಪಾಟೀಲ ನೇತೃತ್ವದ ವಿಭಾಗೀಯ ಪೀಠ, ತುರ್ತು ನೋಟಿಸ್ ಜಾರಿಗೆ ಗುರುವಾರ ಆದೇಶಿಸಿದೆ.
`ನಮ್ಮನ್ನು 1978ರಲ್ಲಿ ಸಂಸ್ಥೆಯಲ್ಲಿ ಕೆಲಸಕ್ಕೆ ಸೇರಿಸಿಕೊಳ್ಳಲಾಯಿತು. ನಂತರ 1991ರಲ್ಲಿ ಕೆಲಸದಿಂದ ತೆಗೆಯಲಾಯಿತು. ಇದನ್ನು ಪ್ರಶ್ನಿಸಿ, ಕಾರ್ಮಿಕ ನ್ಯಾಯಾಲಯದ ಮೊರೆ ಹೋಗಲಾಯಿತು. ಕೆಲಸ ನೀಡುವಂತೆ ಕಾರ್ಮಿಕ ನ್ಯಾಯಾಲಯ ಆದೇಶಿಸಿತು. ಆದರೆ ಸಂಸ್ಥೆ ಕೆಲಸ ನೀಡಲಿಲ್ಲ. ಇದನ್ನು ಪ್ರಶ್ನಿಸಿ, ಹೈಕೋರ್ಟ್ ಮೊರೆ ಹೋಗಲಾಯಿತು' ಎಂದು ತಿಮ್ಮೇಗೌಡ ಮತ್ತು ಇತರರು ಸಲ್ಲಿಸಿರುವ ಅರ್ಜಿಯಲ್ಲಿ ಹೇಳಲಾಗಿದೆ.
ಏಳು ಕಾರ್ಮಿಕರನ್ನು ಪುನಃ ಕೆಲಸಕ್ಕೆ ತೆಗೆದುಕೊಂಡು ಇತರ ಕಾರ್ಮಿಕರಿಗೆ ನೀಡುವಷ್ಟೇ ವೇತನವನ್ನು ನೀಡುವುದಾಗಿ ಸಂಸ್ಥೆ ಹೈಕೋರ್ಟ್ನಲ್ಲಿ ಒಪ್ಪಿಕೊಂಡಿತ್ತು. ಆದರೆ ಇದುವರೆಗೂ ಸಮಾನ ವೇತನ ನೀಡಿಲ್ಲ ಎಂದು ಅರ್ಜಿಯಲ್ಲಿ ದೂರಲಾಗಿದೆ.