ನೆಲ್ಯಾಡಿ (ಉಪ್ಪಿನಂಗಡಿ): ‘ಕೇವಲ ಸರ್ಕಾರಿ ಉದ್ಯೋಗ ಗಿಟ್ಟಿಸುವ ಸಲುವಾಗಿ ಶಿಕ್ಷಣ ಪಡೆಯಬೇಕೆಂಬ ಭಾವನೆ ತಪ್ಪು, ಶಾಲೆಗಳಲ್ಲಿ ಪಠ್ಯದ ಶಿಕ್ಷಣದೊಂದಿಗೆ ಜೀವನ ಶಿಕ್ಷಣವೂ ಸಿಗುವಂತಾಗಬೇಕು’ ಎಂದು ಸುಳ್ಯ ಶಾಸಕ ಎಸ್. ಅಂಗಾರ ಹೇಳಿದರು.
ಶನಿವಾರ ಕೊಣಾಲು ಸರ್ಕಾರಿ ಪದವಿ ಪೂರ್ವ ಕಾಲೇಜು ಇದರ ನೂತನ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರ ಶಾಲೆ, ಕಾಲೇಜುಗಳಿಗೆ ಮೂಲ ಸೌಕರ್ಯ ಪೂರೈಕೆ ಮಾಡಲು ಆದ್ಯತೆ ನೀಡಿ ಪ್ರಯತ್ನಿಸುತ್ತಿದೆ. ಜೊತೆಗೆ ಪೋಷಕರು ಸಹಕಾರ ನೀಡಿದಲ್ಲಿ ವಿದ್ಯಾ ಸಂಸ್ಥೆಗಳು ಇನ್ನೂ ಹೆಚ್ಚಿನ ಅಭಿವೃದ್ಧಿ ಸಾಧ್ಯ ಎಂದರು.
ಜಿಲ್ಲಾ ಪಂಚಾಯಿತಿ ಸದಸ್ಯ ಬಾಲಕೃಷ್ಣ ಬಾಣಜಾಲು ಮಾತನಾಡಿ ಕೊಣಾಲು ಶಾಲೆ ಕ್ರೀಡೆಯಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಹೆಸರು ಗಳಿಸಿದೆ. ಶಾಲೆಯ ಗೌರವ ಕಾಪಾಡಿಕೊಳ್ಳುವ ಜವಾಬ್ದಾರಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಮೇಲಿದೆ ಎಂದರು.
ಗೋಳಿತ್ತೊಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷ ಪೂವಪ್ಪ ಕರ್ಕೇರ ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ಪಂಚಾಯಿತಿ ಸದಸ್ಯೆ ಉಷಾ ಅಂಚನ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ರಮೇಶ್, ಪ್ರಾಚಾರ್ಯ ದಿವಾಕರ ಭಟ್, ಶೋಭಾ ಮಾತನಾಡಿದರು.
ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕ ಸತೀಶ್ಚಂದ್ರ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಶಿವಕುಮಾರ್ ಇದ್ದರು.