ಹೊಸಕೋಟೆ: ಮಕ್ಕಳ ಬೌದ್ಧಿಕ ಬೆಳವಣಿಗೆಗೆ ಪಠ್ಯೇತರ ಚಟುವಟಿಕೆಗಳು ಅವಶ್ಯವಾಗಿದ್ದು ಈ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ನಡೆಸುತ್ತಿರುವ ಪ್ರತಿಭಾ ಕಾರಂಜಿ ಕಾರ್ಯಕ್ರಮ ಸಹಕಾರಿಯಾಗಿದೆ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ತಿರುವರಂಗ ನಾರಾಯಣಸ್ವಾಮಿ ಅಭಿಪ್ರಾಯ ಪಟ್ಟರು.
ಶಿಕ್ಷಣ ಇಲಾಖೆ ಹೊಸಕೋಟೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಶಿಕ್ಷಕರ ಸಮಸ್ಯೆಗಳನ್ನು ತಕ್ಷಣ ಪರಿಹರಿಸುವ ಭರವಸೆ ನೀಡಿದ ಅಧ್ಯಕ್ಷರು, ಜಿಲ್ಲೆಯ ಶಿಕ್ಷಕರ ರಜೆ ನಗದೀಕರಣ ಹಣ ರೂ 1.85 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು. ಸರ್ಕಾರ ಈ ಸಾಲಿನಿಂದಲೇ ಮಕ್ಕಳಿಗೆ ಹೆಚ್ಚುವರಿಯಾಗಿ ಇನ್ನೊಂದು ಸಮವಸ್ತ್ರ ವಿತರಿಸಲು ಕ್ರಮ ಕೈಗೊಂಡಿದೆ ಎಂದು ತಿಳಿಸಿದರು.
ಉಪನಿರ್ದೇಶಕ ಎಚ್.ವಿ. ವೆಂಕಟೇಶಯ್ಯ ಮಾತನಾಡಿ, ನಶಿಸಿ ಹೋಗುತ್ತಿರುವ ಗ್ರಾಮೀಣ ಭಾಗದ ಸಾಂಸ್ಕೃತಿಕ ಚಟುವಟಿಕೆಗಳನ್ನು ಶಾಲಾ ಹಂತದಿಂದಲೇ ಉಳಿಸಿ ಬೆಳೆಸುವಲ್ಲಿ ಪ್ರತಿಭಾ ಕಾರಂಜಿ ಹೆಚ್ಚು ಪ್ರಸ್ತುತವಾಗಿದೆ ಎಂದು ಹೇಳಿದರು.
ತಾ.ಪಂ. ಅಧ್ಯಕ್ಷೆ ಪಿ.ರಾಣಿ ಅಧ್ಯಕ್ಷತೆ ವಹಿಸಿದ್ದರು. ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ಎಂ.ವಾಸುದೇವಯ್ಯ, ಹೋ.ರಾ.ವೆಂಕಟೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಸಿ.ಬಸವರಾಜೇಗೌಡ ಉಪಸ್ಥಿತರಿದ್ದರು. ತಾಲ್ಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಶ್ರೀನಿವಾಸ್ ಸ್ವಾಗತಿಸಿದರು. ತಾಲ್ಲೂಕಿನ 2,460 ಮಕ್ಕಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.