ನಾಪೋಕ್ಲು: ಮಕ್ಕಳಿಗೆ ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಿಗೆ ಅವಕಾಶ ನೀಡಿದರೆ ಅವರ ಭವಿಷ್ಯ ಉಜ್ವಲವಾಗುತ್ತದೆ. ಇದಕ್ಕೆ ಪ್ರತಿಯೊಬ್ಬರ ಮಾರ್ಗದರ್ಶನ, ಸಹಕಾರ ಅಗತ್ಯ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎನ್.ಎ.ರಾಮಸ್ವಾಮಿ ಹೇಳಿದರು. ಸಮೀಪದ ಮೂರ್ನಾಡು ಪ್ರೌಢಶಾಲೆಯಲ್ಲಿ ಗುರುವಾರ ಆಯೋಜಿಸಿದ್ದ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.
ಶಿಕ್ಷಕರೊಂದಿಗೆ ಪೋಷಕರೂ ಸಹ ಮಕ್ಕಳ ವಿದ್ಯಾಭ್ಯಾಸಕ್ಕೆ ಒತ್ತು ನೀಡಬೇಕು. ವಿದ್ಯಾಭ್ಯಾಸ ಒಂದೇ ವಿಷಯಕ್ಕೆ ಸೀಮಿತವಾಗಿರಬಾರದು. ವಿದ್ಯಾರ್ಥಿಗಳು ಜ್ಞಾನಾರ್ಜನೆಗೆ ಒತ್ತು ನೀಡಬೇಕು. ಕಲಿಕೆಯತ್ತ ಮನಸ್ಸನ್ನು ತೊಡಗಿಸಿಕೊಂಡು ಸಮಯದ ಸದುಪಯೋಗಪಡಿಸಿಕೊಳ್ಳಬೇಕು ಎಂದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ವಿದ್ಯಾಸಂಸ್ಥೆಯ ಅಧ್ಯಕ್ಷ ಬಾಚೆಟ್ಟೀರ ಜಿ.ಮಾದಪ್ಪ ಮಾತನಾಡಿ ವಿದ್ಯಾರ್ಥಿಗಳು ಪಾಠದ ಜೊತೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ವಿದ್ಯಾಸಂಸ್ಥೆಗೆ ಹೆಸರು ತರುವಂತಹ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕು ಎಂದು ಸಲಹೆ ನೀಡಿದರು.
ವೇದಿಕೆಯಲ್ಲಿ ಮೂರ್ನಾಡು ಕಾಫಿ ಬೆಳೆಗಾರ ಬಿದ್ದಂಡ ಎಂ.ಉತ್ತಪ್ಪ, ವಿದ್ಯಾಸಂಸ್ಥೆಯ ಕಾರ್ಯದರ್ಶಿ ಚೌರೀರ ಎಂ.ಪೆಮ್ಮಯ್ಯ, ನಿರ್ದೇಶಕರಾದ ಚೇನಂಡ ಬಿ.ಸೋಮಣ್ಣ, ದಂಬೆಕೋಡಿ ಸುಬ್ರಮಣಿ, ಸದಸ್ಯ ಕೆರೆಮನೆ ರಾಮಮೂರ್ತಿ, ಶಾಲಾ ಮುಖ್ಯ ಶಿಕ್ಷಕಿ ಸಿ.ಎ. ದೇವಕ್ಕಿ, ಮೂರ್ನಾಡು ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಬಿ.ಎಂ.ಸರಸ್ವತಿ ಉಪಸ್ಥಿತರಿದ್ದರು.
ಕ್ರೀಡೆ, ಸಾಂಸ್ಕೃತಿಕ ಹಾಗೂ ಪಠ್ಯ ವಿಷಯಗಳಲ್ಲಿ ಏರ್ಪಡಿಸಲಾಗಿದ್ದ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಶಿಕ್ಷಕಿ ಎ.ಎಂ. ಶೈಲಾ ಸ್ವಾಗತಿಸಿದರು. ಶಿಕ್ಷಕ ಎಸ್.ಡಿ. ಪ್ರಶಾಂತ್ ವಂದಿಸಿದರು. ಶಾಲಾವಿದ್ಯಾರ್ಥಿಗಳು ಏರ್ಪಡಿಸಿದ್ದ ವಸ್ತು ಪ್ರದರ್ಶನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಪ್ರೇಕ್ಷಕರ ಗಮನಸೆಳೆದವು.