ಶಿಡ್ಲಘಟ್ಟ: ನೂತನ ಪಡಿತರ ಚೀಟಿ ಸೇರಿದಂತೆ ಸರ್ಕಾರದ ವಿವಿಧ ಸೌಲಭ್ಯ ಪಡೆಯುವ ಸಂದರ್ಭದಲ್ಲಿ ತಾಲ್ಲೂಕು ಕಚೇರಿಯಿಂದ ಪಡೆಯಬೇಕಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳಿಗೆ ಶಾಲಾ ವರ್ಗಾವಣೆ ಪ್ರಮಾಣ ಪತ್ರ ಅಥವಾ ನ್ಯಾಯಾಲಯ ಪ್ರಮಾಣ ಪತ್ರದ ಪೈಕಿ ಯಾವುದಾದರೂ ಒಂದನ್ನು ಪಡೆದುಕೊಳ್ಳುವಂತೆ ಶಾಸಕ ವಿ.ಮುನಿಯಪ್ಪ ಕಂದಾಯ ಅಧಿಕಾರಿಗಳಿಗೆ ಸೂಚಿಸಿದರು.
ಪಟ್ಟಣದ ಪ್ರವಾಸಿ ಮಂದಿರಲ್ಲಿ ಈಚೆಗೆ ಸಾರ್ವಜನಿಕರು ನೀಡಿದ ದೂರು ಆಲಿಸಿದ ಅವರು ಬಯೋಮೆಟ್ರಿಕ್ ಹಾಗೂ ಭಾವಚಿತ್ರಗಳನ್ನು ತೆಗೆಯಲು ಸರ್ಕಾರ ನಿಗದಿ ಪಡಿಸಿದ ದರಕ್ಕಿಂತ ಹೆಚ್ಚು ಹಣ ಪಡೆಯುವವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಆಹಾರ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ಪಡೆಯಲು ಸಾಮಾನ್ಯ ಜನರಿಗೆ ತುಂಬಾ ಕಷ್ಟವಾಗುತ್ತಿದೆ.
ಕೋರ್ಟ್ನಿಂದ ಪ್ರಮಾಣ ಪತ್ರ ಪಡೆಯಲು ಪರದಾಡುತ್ತಿದ್ದಾರೆ. ಇದನ್ನೇ ಕಾಯಕವನ್ನಾಗಿಸಿಕೊಂಡು ಕೆಲವರು ಸಾರ್ವಜನಿಕರಿಂದ ಹೆಚ್ಚು ಹಣ ಲೂಟಿ ಮಾಡುತ್ತಿದ್ದಾರೆ. ಶಾಲಾ ವರ್ಗಾವಣೆ ಪ್ರಮಾಣ ಪತ್ರ ಅಥವಾ ನ್ಯಾಯಾಲಯ ಪ್ರಮಾಣ ಪತ್ರದ ಪೈಕಿ ಯಾವುದಾದರೂ ಒಂದು ದಾಖಲೆ ಪಡೆದುಕೊಂಡು ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನೀಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಬಿ.ಎನ್.ವೇಣುಗೋಪಾಲ್, ಆಹಾರ ನಿರೀಕ್ಷಕರಾದ ಶ್ರೀಧರ್, ಬುಡಾನ್ಸಾಬ್, ಶಿರಸ್ತೆದಾರ ಪ್ರಕಾಶ್ ಮತ್ತಿತರರು ಹಾಜರಿದ್ದರು.