ತುಮಕೂರು: ನಗರದಲ್ಲಿ ಅ. 12ರಿಂದ ಮೂರು ದಿನಗಳ ಕಾಲ ಪತ್ರಕರ್ತರ 65ನೇ ರಾಷ್ಟ್ರೀಯ ಸಮಾವೇಶ ನಡೆಯಲಿದೆ.
ಅ. 12ರಂದು ಬೆಳಿಗ್ಗೆ 10.30ಕ್ಕೆ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸಮಾವೇಶಕ್ಕೆ ಚಾಲನೆ ನೀಡಲಿದ್ದಾರೆ. ವಿವಿಧೆಡೆಯಿಂದ ಸುಮಾರು 2500 ಪತ್ರಕರ್ತರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಸುಮಾರು 1 ಕೋಟಿ ರೂಪಾಯಿ ವೆಚ್ಚವಾಗಲಿದೆ ಎಂದು ಸ್ವಾಗತ ಸಮಿತಿ ಅಧ್ಯಕ್ಷ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಶಿವಣ್ಣ ತಿಳಿಸಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಈ ಸಮಾವೇಶ ಆಯೋಜಿಸಿದೆ. ಇದಕ್ಕಾಗಿ ನಗರದ ಶ್ರೀದೇವಿ ಎಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಡಾ.ಡಿ.ವಿ.ಗುಂಡಪ್ಪ ವೇದಿಕೆ ನಿರ್ಮಿಸಲಾಗಿದೆ. 12 ಮತ್ತು 13ರಂದು ಮುದ್ರಣ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮ ಕುರಿತು ವಿಚಾರ ಸಂಕಿರಣ ನಡೆಯಲಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಸಿದ್ದಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಕೇಂದ್ರ ರೈಲ್ವೆ ಸಹಾಯಕ ಸಚಿವ ಕೆ.ಎಚ್.ಮುನಿಯಪ್ಪ, ವಿಧಾನ ಪರಿಷತ್ ಸದಸ್ಯ ಡಾ.ಎಂ.ಆರ್.ಹುಲಿನಾಯ್ಕರ್ ಭಾಗವಹಿಸುವರು.
13ರಂದು ಸಂಜೆ 4.30ಕ್ಕೆ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವೆ ಅಂಬಿಕಾ ಸೋನಿ ಸಮಾರೋಪ ಭಾಷಣ ಮಾಡುವರು. ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ, ಸಚಿವ ಗೋವಿಂದ ಕಾರಜೋಳ ಭಾಗವಹಿಸುವರು.