ಬೀದರ್: ಮಧ್ಯಪ್ರದೇಶದಲ್ಲಿ ಹಿರಿಯ ಪತ್ರಕರ್ತೆ ಚಂದ್ರಿಕಾ ರಾಯ್ ಹಾಗೂ ಅವರ ಇಡೀ ಕುಟುಂಬವನ್ನು ಹತ್ಯೆಗೈದಿರುವುದನ್ನು ಖಂಡಿಸಿ ಭ್ರಷ್ಟಾಚಾರ ವಿರೋಧಿ ಜನಾಂದೋಲನ ಸಮಿತಿಯು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿತು.
ಸಮಿತಿಯ ಕಾರ್ಯಕರ್ತರು ನಗರದ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ಸಿಂಗ್ ಚವ್ಹಾಣ್ ಅವರ ಪ್ರತಿಕೃತಿಯ ಮೆರವಣಿಗೆ ನಡೆಸಿದರು.
ಪ್ರತಿಕೃತಿಯನ್ನು ಸುಟ್ಟು ಹಾಕಲು ಪ್ರಯತ್ನಿಸಿದರಾದರೂ ಪೊಲೀಸರು ಅದಕ್ಕೆ ಅವಕಾಶ ಕೊಡಲಿಲ್ಲ.
ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತಿದ್ದ ಪತ್ರಕರ್ತೆಯನ್ನು ಕಲ್ಲಿದ್ದಲು ಮಾಫಿಯಾದವರು ಕೊಲೆಗೈದಿರುವುದನ್ನು ತೀವ್ರವಾಗಿ ಖಂಡಿಸಲಾಗುತ್ತದೆ ಎಂದು ರಾಷ್ಟ್ರಪತಿಗಳಿಗೆ ಬರೆದ ಮನವಿ ಪತ್ರದಲ್ಲಿ ತಿಳಿಸಿದ್ದಾರೆ.
ಮಧ್ಯಪ್ರದೇಶ ಸರ್ಕಾರವನ್ನು ಕೂಡಲೇ ವಜಾಗೊಳಿಸಬೇಕು. ಹಾಗೂ ಕಲ್ಲಿದ್ದಲು ಮಾಫಿಯಾದವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.
ಸಮಿತಿಯ ಅಧ್ಯಕ್ಷ ಈಶ್ವರಪ್ಪ ಚಾಕೋತೆ, ಕಾರ್ಯದರ್ಶಿ ಬಾಬುರಾವ ಹೊನ್ನಾ, ಪ್ರಮುಖರಾದ ಘಾಳೆಪ್ಪ ಸೊರಾಳೆ, ಶೇಕ್ ಚಾಂದ್ಮಿಯ್ಯಾ, ಶಿವರಾಜ ಭೈರಪ್ಪ, ಮಹಮ್ಮದ್ ಹಫೀಜ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.