ಬೆಂಗಳೂರು: ನಗರದ ಎಂಎಲ್ಎ ಬಡಾವಣೆಯಲ್ಲಿ ರಸ್ತೆ ನಿರ್ಮಾಣಕ್ಕೆ ಮೀಸಲಿಟ್ಟಿದ್ದ ಜಾಗದಲ್ಲಿ ಅಪಾರ್ಟ್ಮೆಂಟ್ ನಿರ್ಮಿಸಲು ಅವಕಾಶ ನೀಡಿದ ಪ್ರಕರಣ ಕುರಿತು ಪರಿಶೀಲನೆ ನಡೆಸಲು ಸಮಿತಿಯೊಂದನ್ನು ನೇಮಕ ಮಾಡಲಾಗಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಪರ ವಕೀಲರು ಹೈಕೋರ್ಟ್ಗೆ ಶುಕ್ರವಾರ ತಿಳಿಸಿದರು.
ಮಾಜಿ ಶಾಸಕಿ ಶಕುಂತಲಾ ಚೌಗಲೆ ಮತ್ತು ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ಮತ್ತು ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರನ್ನು ಒಳಗೊಂಡ ವಿಭಾಗೀಯ ಪೀಠಕ್ಕೆ ಈ ವಿಷಯ ತಿಳಿಸಿದರು.
ಬಿಬಿಎಂಪಿ ಆಯುಕ್ತರು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಹಾಗೂ ಸರ್ಕಾರಿ ವಕೀಲ ವೀರಪ್ಪ ಅವರು ಈ ಸಮಿತಿಯಲ್ಲಿದ್ದಾರೆ ಎಂದು ಅವರು ವಿವರಿಸಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ಸಮಿತಿಯು ಸ್ಥಳಕ್ಕೆ ಭೇಟಿ ನೀಡಿ, ಮೂರು ತಿಂಗಳಲ್ಲಿ ವರದಿ ನೀಡಬೇಕು ಎಂದು ಸೂಚಿಸಿತು. ವಿಚಾರಣೆ ಮುಂದೂಡಲಾಗಿದೆ.