ಮಡಿಕೇರಿ: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಘೋಷಣೆ ಮಾಡಿರುವ ಪರಿಷ್ಕೃತ ವೇತನವನ್ನು ಆರು ತಿಂಗಳು ಕಳೆದರೂ ಬಿಡುಗಡೆ ಮಾಡದೇ ಇರುವುದನ್ನು ವಿರೋಧಿಸಿ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ಗಾಂಧಿ ಮೈದಾನದಿಂದ ಮೆರವಣಿಗೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಚೇರಿಗೆ ತೆರಳಿ ಉಪ ನಿರ್ದೇಶಕರಿಗೆ ಮನವಿಪತ್ರ ಸಲ್ಲಿಸಿದರು. ನಂತರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಹೆಚ್ಚುವರಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಒಕ್ಕೂಟದ ಉಪಾಧ್ಯಕ್ಷ ಟಿ.ಪಿ.ರಮೇಶ್ಅವರು, ಮಾತನಾಡಿ, ಪರಿಷ್ಕೃತ ವೇತನ ಬಿಡುಗಡೆ ಮಾಡದಿರುವ ಬಗ್ಗೆ ಹಲವಾರು ಬಾರಿ ತಿಳಿಸಿದರೂ ಸ್ಪಂದನ ದೊರಕಿಲ್ಲ. ಇದರಿಂದಾಗಿ ಬೀದಿಗಿಳಿದು ಹೋರಾಟ ನಡೆಸಬೇಕಾಗಿ ಬಂದಿದೆ ಎಂದರು.
ಮಡಿಕೇರಿ ತಾಲ್ಲೂಕು ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ಅಧ್ಯಕ್ಷೆ ಎ.ಜಿ.ತಾರಾಮಣಿ, ಪ್ರಧಾನ ಕಾರ್ಯದರ್ಶಿ ಕೆ.ಜಿ.ಡೈನಾ, ಜಿಲ್ಲಾ ಪ್ರಮುಖರಾದ ಜಿ.ಎಸ್.ಸರೋಜಾ, ಬಿ.ಎಂ ಪುಷ್ಪಾವತಿ, ಕೆ.ಎ.ಕಸ್ತೂರಿ, ಎಚ್.ಬಿ.ಪಾರ್ವತಿ ಮತ್ತಿತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.