ಯಾದಗಿರಿ: ಪರಿಸರದ ಹಾನಿಯಿಂದಾಗಿ ಮನುಷ್ಯನ ಮೇಲೆ ದುಷ್ಪರಿಣಾಮಗಳು ಆಗುತ್ತಿದ್ದು, ಪರಿಸರದ ಸಮತೋಲನ ಕಾಪಾಡಿಕೊಂಡು ಹೋಗಬೇಕಾಗಿದೆ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸಂಜೀವಕುಮಾರ ಹಂಚಾಟೆ ಹೇಳಿದರು.
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ಅರಣ್ಯ ಇಲಾಖೆ, ಸಾಮಾಜಿಕ ಅರಣ್ಯ ಇಲಾಖೆಗಳ ಆಶ್ರಯದಲ್ಲಿ ಭಾನುವಾರ ಏರ್ಪಡಿಸಿದ್ದ ಸಸಿ ನೆಡುವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪರಿಸರವನ್ನು ಕಾಯ್ದುಕೊಳ್ಳದಿದ್ದರೆ, ಮುಂದಿನ ದಿನಗಳಲ್ಲಿ ಗಂಭೀರ ಪರಿಸ್ಥಿತಿ ಎದುರಿಸಬೇಕಾಗುತ್ತದೆ. ಸುತ್ತಲಿನ ಪರಿಸರದ ನೈರ್ಮಲ್ಯ ಕಾಪಾಡಿಕೊಳ್ಳುವ ಮೂಲಕ ಉತ್ತಮ ಆರೋಗ್ಯ ಪಡೆಯಬೇಕು. ಇದಕ್ಕಾಗಿ ಗಿಡಗಳನ್ನು ಬೆಳೆಸುವ ಅವಶ್ಯಕತೆ ಇದೆ ಎಂದು ತಿಳಿಸಿದರು.
ಜನಸಾಮಾನ್ಯರಲ್ಲಿ ಕಾನೂನಿನ ಅರಿವು ಮೂಡಿಸಲು ರಾಷ್ಟ್ರೀಯ, ರಾಜ್ಯ ಮತ್ತು ಜಿಲ್ಲಾ ಮಟ್ಟದ ಕಾನೂನು ಸೇವಾ ಪ್ರಾಧಿಕಾರಗಳು ಕಾರ್ಯ ಮಾಡುತ್ತಿವೆ. ಪ್ರತಿಯೊಬ್ಬರೂ ಕಾನೂನಿನ ನೆರವು ಪಡೆಯಲು ಮುಂದಾಗಬೇಕು. ಕಡುಬಡವರಿಗೆ ಉಚಿತ ಕಾನೂನಿನ ನೆರವನ್ನು ನೀಡಲಾಗುತ್ತಿದೆ ಎಂದು ವಿವರಿಸಿದರು.
ನ್ಯಾಯಾಧೀಶ ಜಿ.ಎಸ್. ದೇಶಪಾಂಡೆ, ವಕೀಲರ ಸಂಘದ ಅಧ್ಯಕ್ಷ ಪಿ.ಶಿವರಾಜ್, ಅರಣ್ಯಾಧಿಕಾರಿ ಆರ್.ಆರ್.ಯಾದವ, ವಕೀಲರ ಸಂಘದ ಸದಸ್ಯರು, ಸಾರ್ವಜನಿಕರು ಪಾಲ್ಗೊಂಡಿದ್ದರು.