ಯಾದಗಿರಿ: ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಪ್ಲಾಸ್ಟಿಕ್ ಬಳಕೆ ತಡೆಗಟ್ಟುವ ದೃಢ ನಿರ್ಧಾರ ಕೈಗೊಂಡಾಗ ಮಾತ್ರ ಪರಿಸರ ಸಂರಕ್ಷಣೆ ಮಾಡಲು ಸಾಧ್ಯವಾಗಲಿದೆ ಎಂದು ನಗರಸಭೆ ಅಧ್ಯಕ್ಷೆ ಲಲಿತಾ ಅನಪೂರ ಹೇಳಿದರು.
ಸೋಮವಾರ ಇಲ್ಲಿಯ ನಗರಸಭೆ ಕಾರ್ಯಾಲಯದ ಆವರಣದಲ್ಲಿ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು ಹಾಗೂ ನಗರಸಭೆಗಳ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ಲಾಸ್ಟಿಕ್ ಬಳಕೆ ನಿಷೇಧ ನಡಿಗೆ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಏರುತ್ತಿರುವ ಜಾಗತಿಕ ತಾಪಮಾನಕ್ಕೆ ಕಡಿವಾಣ ಹಾಕಲು ಪ್ಲಾಸ್ಟಿಕ್ ಬಳಕೆ ಸಂಪೂರ್ಣ ನಿಲ್ಲಿಸುವುದು ಅವಶ್ಯಕವಾಗಿದೆ. ಪ್ಲಾಸ್ಟಿಕ್ ಬಳಕೆಯಿಂದಾಗಿ ಪರಿಸರವೂ ಹಾಳಾಗುತ್ತಿದ್ದು, ಮಣ್ಣಿನ ಫಲವತ್ತತೆಯು ಕಡಿಮೆ ಆಗುತ್ತಿದೆ. ಮುಂದಿನ ಪೀಳಿಗೆಗೆ ಉತ್ತಮ ಭೂಮಿಯನ್ನು ಬಿಟ್ಟು ಹೋಗುವ ಕರ್ತವ್ಯ ಪ್ರತಿಯೊಬ್ಬರದಾಗಿದ್ದು, ಈ ನಿಟ್ಟಿನಲ್ಲಿ ಎಲ್ಲರೂ ಕಾರ್ಯೋನ್ಮುಖರಾಗಬೇಕು ಎಂದು ಸಲಹೆ ಮಾಡಿದರು.
ಪ್ಲಾಸ್ಟಿಕ್ನಿಂದ ತಯಾರಿಸಿದ ದಿನ ಬಳಕೆ ವಸ್ತುಗಳನ್ನು ಸಂಪೂರ್ಣ ನಿಷೇಧಿಸಬೇಕು. ಪ್ರತಿಯೊಬ್ಬರು ಪ್ರಕೃತಿಗೆ ಹಾನಿಯಾಗದ ರೀತಿಯಲ್ಲಿ ಜೀವನ ನಡೆಸಿದಲ್ಲಿ ಮಾತ್ರ ಪರಿಸರದ ಸಮತೋಲನ ಕಾಪಾಡಲು ಸಾಧ್ಯವಾಗಲಿದೆ ಎಂದರು.
ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಎಸ್.ಎಸ್. ಜುಗೇರಿ, ಉಪನ್ಯಾಸಕ ರುದ್ರಗೌಡ ಮಾಲಿಪಾಟೀಲ, ನಗರಸಭೆ ಉಪಾಧ್ಯಕ್ಷ ನರಸಿಂಗ್ ಲಿಂಗೇರಿ, ಸದಸ್ಯರಾದ ಅಬ್ದುಲ ಕರಿಂ, ರವಿ ದಾಸನ್, ನಗರಸಭೆ ಕಚೇರಿ ವ್ಯವಸ್ಥಾಪಕ ನೀಲಕಂಠ, ಮತ್ತಿತರರು ಹಾಜರ್ದ್ದಿದರು.