ಆನೇಕಲ್: ಪಶು ಆಹಾರ ಉತ್ಪಾದನೆಗಾಗಿ ಬಮೂಲ್ ವತಿಯಿಂದ ಪ್ರತ್ಯೇಕ ಘಟಕ ತೆರೆಯಲು ಚಿಂತನೆ ನಡೆಸಲಾಗಿದೆ ಎಂದು ಬಮೂಲ್ ನಿರ್ದೇಶಕ ಆರ್.ಕೆ.ರಮೇಶ್ ಹೇಳಿದರು.
ತಾಲ್ಲೂಕಿನ ಜಿಗಣಿಯಲ್ಲಿ ಬೆಂಗಳೂರು ಹಾಲು ಒಕ್ಕೂಟ ಹಾಗೂ ಆನೇಕಲ್ ಶಿಬಿರದ ವತಿಯಿಂದ ಆಯೋಜಿಸಲಾಗಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ರೈತರಿಗೆ ಅವಶ್ಯಕವಿರುವ ಪ್ರಮಾಣದಲ್ಲಿ ಕೆಎಂಎಫ್ ವತಿಯಿಂದ ಪಶು ಆಹಾರ ಪೂರೈಕೆಯಾಗುತ್ತಿಲ್ಲ. ಇದರಿಂದ ರೈತರು ಪರದಾಡುವ ಪರಿಸ್ಥಿತಿಯಿದೆ. ಈ ಸಮಸ್ಯೆಯ ನಿವಾರಣೆಗಾಗಿ ಬಮೂಲ್ ವತಿಯಿಂದ ಪ್ರತ್ಯೇಕ ಉತ್ಪಾದನಾ ಘಟಕವನ್ನು ಪ್ರಾರಂಭಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.
ಶಾಸಕ ರಾಮಲಿಂಗಾರೆಡ್ಡಿ ಮಾತನಾಡಿ, ಹೈನುಗಾರಿಕೆಯಿಂದ ರೈತರ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗಿದೆ. ನವೀನ ತಂತ್ರಜ್ಞಾನಗಳನ್ನು ಬಳಸಿಕೊಂಡು ಹೆಚ್ಚು ಉತ್ಪಾದನೆಯತ್ತ ಗಮನ ಹರಿಸಬೇಕು ಎಂದರು.
ಬೆಂಗಳೂರು ಹಾಲು ಒಕ್ಕೂಟದ ಅಧ್ಯಕ್ಷ ದಿಬ್ಬೂರು ಜಯಣ್ಣ ಮಾತನಾಡಿ, ವಿದ್ಯಾರ್ಥಿಗಳು ತಾಳ್ಮೆ ಕಳೆದುಕೊಳ್ಳದೆ ಸಂಯಮದಿಂದ ಅಧ್ಯಯನದಲ್ಲಿ ತೊಡಗಿಕೊಳ್ಳಬೇಕು. ಪ್ರತಿಭಾವಂತರಿಗೆ ಎಲ್ಲಾ ರೀತಿಯ ಪ್ರೋತ್ಸಾಹ ನೀಡುವುದು ಒಕ್ಕೂಟದ ಗುರಿಯಾಗಿದೆ. ಹಾಗಾಗಿ ವಿದ್ಯಾರ್ಥಿ ನಿಲಯ ಸ್ಥಾಪನೆಯ ಮೂಲಕ ಹಾಲು ಉತ್ಪಾದಕ ರೈತರ ಮಕ್ಕಳಿಗೆ ಬೆಂಗಳೂರಿನಲ್ಲಿ ವಸತಿ ಹಾಗೂ ಊಟದ ಸೌಲಭ್ಯ ಕಲ್ಪಿಸಿಕೊಡಲಾಗಿದೆ ಎಂದರು.
ವಿದೇಶದಲ್ಲಿ ಉನ್ನತ ವ್ಯಾಸಂಗ ಮಾಡುತ್ತಿರುವ ತಟ್ಟನಹಳ್ಳಿ ಸೌಮ್ಯ ಎಂಬ ವಿದ್ಯಾರ್ಥಿನಿಯನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ತಾಲ್ಲೂಕಿನ ಹಾಲು ಉತ್ಪಾದಕ ರೈತರ ಪ್ರತಿಭಾವಂತ ಮಕ್ಕಳನ್ನು ಪುರಸ್ಕರಿಸಲಾಯಿತು.
ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿಯ ಅಧ್ಯಕ್ಷ ಕೆ.ಸಿ.ರಾಮಚಂದ್ರ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಗೋಪಾಲ ಕೃಷ್ಣ, ಎಂ.ಶಾಂತಮ್ಮ, ಬಮೂಲ್ ವ್ಯವಸ್ಥಾಪಕ ರವಿಶಂಕರ್ ಹೆಗಡೆ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಚ್.ಎಸ್.ಬಸವರಾಜ್, ಹಾಪ್ಕಾಮ್ಸ ನಿರ್ದೇಶಕ ಎಂ.ಬಾಬು, ರಾಜ್ಯ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ ಸುಷ್ಮಾ ರಾಜಗೋಪಾಲ್ ರೆಡ್ಡಿ, ನಿರ್ದೇಶಕರಾದ ನರಸಿಂಹಮೂರ್ತಿ, ಲಿಂಗೇಶ್ ಕುಮಾರ್, ಎ.ಸೋಮಣ್ಣ, ಹನುಮಂತೇ ಗೌಡ, ಮಹೇಶ್ ಚಂದ್ರ, ಎಂ.ಮುನಿಸುಬ್ಬಯ್ಯ, ಗ್ರಾಮ ಪಂಚಾಯಿತಿ ಸದಸ್ಯ ಅಚ್ಯುತ ರಾಜು ಮತ್ತಿತರರು ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.