ಬಾಗಲಕೋಟೆ: ರಾಜ್ಯದಲ್ಲಿ ಪಶು ವೈದ್ಯಕೀಯ ಕ್ಷೇತ್ರಕ್ಕೆ ಹೆಚ್ಚಿನ ತಜ್ಞರನ್ನು ರೂಪುಗೊಳಿಸುವ ಉದ್ದೇಶದಿಂದ ಶೀಘ್ರದಲ್ಲಿಯೇ ಎರಡು ಡಿಪ್ಲೊಮಾ ಕಾಲೇಜುಗಳನ್ನು ಆರಂಭಿಸುವುದಾಗಿ ಸಚಿವ ರೇವೂ ನಾಯಕ ಬೆಳಮಗಿ ತಿಳಿಸಿದರು.
ಗದ್ದನಕೇರಿ ತಾಂಡಾದ ದುರ್ಗಾದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಶನಿವಾರ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ 487 ಪಶು ವೈದ್ಯರ ಹುದ್ದೆಗಳು ಖಾಲಿ ಇವೆ. ಇದಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿತ್ತು. ಆದರೆ ಕೇವಲ 220 ಅರ್ಜಿಗಳು ಬಂದಿದ್ದವು. ಅದರಲ್ಲಿ 215 ಪಶು ವೈದ್ಯರನ್ನು ಆಯ್ಕೆ ಮಾಡಲಾಗಿದೆ. ಅವರೆಲ್ಲ ಶೀಘ್ರವೇ ಸೇವೆಗೆ ಹಾಜರಾಗಲಿದ್ದಾರೆ ಎಂದರು. ಬಿಜೆಪಿ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಅರಗಿಸಿಕೊಳ್ಳಲು ವಿರೋಧ ಪಕ್ಷಗಳಿಗೆ ಆಗುತ್ತಿಲ್ಲ. ನಮ್ಮ ಪಕ್ಷದ ಮಾಜಿ ಮುಖ್ಯಮಂತ್ರಿಗಳು, ಸಚಿವರು ಹಾಗೂ ಶಾಸಕರ ವಿರುದ್ಧ ರಾಜಕೀಯ ಪಿತೂರಿ ನಡೆಸುತ್ತಿವೆ ಎಂದು ಸಚಿವರು ಟೀಕಿಸಿದರು. `ರಾಜಕೀಯ ಪಿತೂರಿ ಬಹಳ ದಿನ ನಡೆಯುವುದಿಲ್ಲ. ಶೀಘ್ರದಲ್ಲಿಯೇ ನಮ್ಮ ನಾಯಕರು ದೋಷಮುಕ್ತಗೊಳ್ಳಲಿದ್ದಾರೆ~ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಂಸದ ಪಿ.ಸಿ. ಗದ್ದಿಗೌಡರ, ಶಾಸಕ ವೀರಣ್ಣ ಚರಂತಿಮಠ, ವಿಧಾನ ಪರಿಷತ್ ಸದಸ್ಯ ನಾರಾಯಣಸಾ ಭಾಂಡಗೆ, ಜಿ.ಪಂ. ಉಪಾಧ್ಯಕ್ಷ ಹೂವಪ್ಪ ರಾಠೋಡ, ಮಾಜಿ ಸಚಿವ ಎಚ್.ವೈ. ಮೇಟಿ, ಬಸವೇಶ್ವರ ಬ್ಯಾಂಕ್ ಅಧ್ಯಕ್ಷ ಪ್ರಕಾಶ ತಪಶೆಟ್ಟಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮಾಧವಿ ರಾಠೋಡ, ವಿಜಾಪುರ ಜಿ.ಪಂ. ಮಾಜಿ ಅಧ್ಯಕ್ಷ ಅರ್ಜುನ ರಾಠೋಡ ಇತರರು ಇದ್ದರು.