ಬಂಗಾರಪೇಟೆ: ತಾಲ್ಲೂಕು ಕಚೇರಿಯಲ್ಲಿ ಪಹಣಿ ತಿದ್ದುಪಡಿಗೆ ಲಂಚ ಪಡೆಯಲಾಗುತ್ತಿದೆ ಎಂದು ಆರೋಪಿಸಿ ನವ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಶುಕ್ರವಾರ ತಹಶೀಲ್ದಾರ್ ಕಚೇರಿ ಮುಂಭಾಗ ಧರಣಿ ನಡೆಸಿದರು.
ಪಹಣಿ ತಿದ್ದುಪಡಿಗೆ ರೈತರು ಅರ್ಜಿ ಸಲ್ಲಿಸಿ ವರ್ಷಗಳಾದರೂ ತಿದ್ದುಪಡಿ ಮಾಡದೆ ಅಧಿಕಾರಿಗಳು ನಿರ್ಲಕ್ಷ್ಯಿದ್ದಾರೆ ಎಂದು ಧರಣಿ ನಿರತರು ಆಕ್ರೋಶ ವ್ಯಕ್ತಪಡಿಸಿದರು.
ಅರ್ಜಿಯೊಂದಿಗೆ ಸಂಬಂಧಿಸಿದ ದಾಖಲೆ ಸಲ್ಲಿಸಿದ್ದರೂ ಕಚೇರಿಯ ಸಿಬ್ಬಂದಿ ಲಂಚಕ್ಕಾಗಿ ಪೀಡಿಸುತ್ತಿದ್ದಾರೆ. ಲಂಚ ಕೇಳುತ್ತಿರುವ ಸಿಬ್ಬಂದಿ ಮೇಲೆ ಕ್ರಮ ಕೈಗೊಳ್ಳಬೇಕು. ನಿಗದಿತ ಅವಧಿಯಲ್ಲಿ ಪಹಣಿ ತಿದ್ದುಪಡಿ ಮಾಡಬೇಕು ಎಂದು ಒತ್ತಾಯಿಸಿದರು. ಉಪವಿಭಾಗಾಧಿಕಾರಿ ಧರಣಿ ನಿರತರೊಂದಿಗೆ ದೂರವಾಣಿ ಮೂಲಕ ಮಾತನಾಡಿ, ಸೆ. 13ರಂದು ತಾಲ್ಲೂಕು ಕಚೇರಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳವುದಾಗಿ ಭರವಸೆ ನೀಡಿದರು.
ನವ ಕರ್ನಾಟಕ ರಕ್ಷಣಾ ವೇದಿಕೆ ಮುಖಂಡರಾದ ಎಸ್.ಎನ್.ರಾಜಗೋಪಾಲಗೌಡ, ಚಿನ್ನವೆಂಕಟೇಶ್, ಕೆ.ಸಿ.ಗೋಪಾಲ್, ಎನ್.ದೇವರಾಜ್, ಪ್ರಸನ್ನ ಇತರರು ಪಾಲ್ಗೊಂಡಿದ್ದರು.