ಬೆಂಗಳೂರು: ವಿಜಾಪುರ ಜಿಲ್ಲೆಯ ಸಿಂಧಗಿಯಲ್ಲಿ ಪಾಕಿಸ್ತಾನದ ಧ್ವಜ ಹಾರಿಸಿದ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಜೆಡಿಎಸ್ ಶಾಸಕ ಜಮೀರ್ ಅಹ್ಮದ್ ಶುಕ್ರವಾರ ಇಲ್ಲಿ ಸರ್ಕಾರವನ್ನು ಒತ್ತಾಯಿಸಿದರು.
ತಹಸೀಲ್ದಾರ್ ಕಚೇರಿ ಮುಂದೆ ಪಾಕಿಸ್ತಾನದ ಧ್ವಜ ಹಾರಿಸಿದವರು ಶ್ರೀರಾಮ ಸೇನೆ ಕಾರ್ಯಕರ್ತರು ಎಂದು ಪೊಲೀಸರು ಹೇಳುತ್ತಿದ್ದರೆ, ಶ್ರೀರಾಮ ಸೇನೆಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರು ಇದು ಆರ್ಎಸ್ಎಸ್ನವರ ಕೃತ್ಯ ಎಂದು ಹೇಳಿದ್ದಾರೆ. ಸತ್ಯಾಂಶ ಹೊರ ಬರಬೇಕಾದರೆ ಸಿಬಿಐ ತನಿಖೆ ಆಗಬೇಕು ಎಂದು ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.
ಹಿಂದೂಪರ ಸಂಘಟನೆಗಳು ಮತ ಬ್ಯಾಂಕ್ ರಾಜಕಾರಣಕ್ಕಾಗಿ ರಾಷ್ಟ್ರ ದ್ರೋಹದ ಕೃತ್ಯ ನಡೆಸಿ, ಅದನ್ನು ಒಂದು ಸಮುದಾಯದ ತಲೆಗೆ ಕಟ್ಟುವ ಯತ್ನ ನಡೆಸಿದ್ದಾರೆ ಎಂದು ದೂರಿದರು.
ರಾಜ್ಯ ಸರ್ಕಾರ ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸದಿದ್ದರೆ ಜೆಡಿಎಸ್ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಿ ರಾಜ್ಯಪಾಲರಿಗೆ ದೂರು ನೀಡಲಿದೆ ಎಂದು ಅವರು ತಿಳಿಸಿದರು.