ಪಾವಗಡ: ವಿದ್ಯಾರ್ಥಿಗಳು ಸಂಶೋಧನಾ ಪ್ರವೃತ್ತಿ ರೂಢಿಸಿಕೊಂಡರೆ ಮಾತ್ರ ಭವಿಷ್ಯ ಉಜ್ವಲವಾಗುತ್ತದೆ ಎಂದು ತುಮಕೂರು ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್.ಸಿ.ಶರ್ಮ ಅಭಿಪ್ರಾಯಪಟ್ಟರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ನಡೆದ ವಾರ್ಷಿಕೋತ್ಸವ ಹಾಗೂ ರಜತ ಮಹೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಸಂಶೋಧನಾ ಕಾರ್ಯದಲ್ಲಿ ಹೆಚ್ಚಿನ ಆಸಕ್ತಿ ವಹಿಸಬೇಕು. ನಿಯತಕಾಲಿಕೆಗಳು, ಶೈಕ್ಷಣಿಕ ಸಮಾವೇಶಗಳು, ವಿಚಾರ ಸಂಕಿರಣಗಳಲ್ಲಿ ಕ್ರಿಯಾಶೀಲತೆಯಿಂದ ಪಾಲ್ಗೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಶೀಘ್ರ ಕಾಲೇಜಿಗೆ ಸಂಶೋಧನಾ ಕೇಂದ್ರವೊಂದನ್ನು ಮಂಜೂರು ಮಾಡಲಾಗುವುದು. ಕಾಲೇಜಿನಲ್ಲಿ ರಾಷ್ಟ್ರ ಮಟ್ಟದ ವಿಚಾರ ಸಂಕಿರಣ ಆಯೋಜಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಚಲನಚಿತ್ರ ನಟ ಹಾಗೂ ನಿವೃತ್ತ ಪ್ರಾಂಶುಪಾಲ ಪ್ರೊ.ಟಿ.ಎನ್.ಲೋಹಿತಾಶ್ವ ಮಾತನಾಡಿ, ವಿದ್ಯಾರ್ಥಿಗಳು ಪ್ರಶ್ನಿಸುವ ಹಾಗೂ ಚಿಕಿತ್ಸಕ ಮನೋಭಾವ ರೂಢಿಸಿಕೊಳ್ಳಬೇಕು. ಅನ್ಯಾಯವನ್ನು ಪ್ರತಿಭಟಿಸದಿದ್ದರೆ ಸ್ವತಃ ನಾವೇ ಆನ್ಯಾಯ ಎಸಗಿದಂತೆ ಆಗುತ್ತದೆ ಎಂದು ಅಭಿಪ್ರಾಯಪಟ್ಟರು.
ತುಮಕೂರು ವಿ.ವಿ. ಪರೀಕ್ಷಾಂಗ ಕುಲ ಸಚಿವ ಪ್ರೊ.ಎನ್.ಲಕ್ಷ್ಮಿಕಾಂತ್ `ಬೆಳಕು' ವಾರ್ಷಿಕ ಸಂಚಿಕೆ ಬಿಡುಗಡೆ ಮಾಡಿದರು. ಇದೇ ಸಂದರ್ಭದಲ್ಲಿ ಕಾಲೇಜಿನಲ್ಲಿ 15 ವರ್ಷ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಪ್ರೊ.ಎಸ್.ಎಚ್.ಅಂಜನರೆಡ್ಡಿ ಅವರನ್ನು ಸನ್ಮಾನಿಸಲಾಯಿತು.
ಪ್ರಾಂಶುಪಾಲ ಡಾ.ವೈ.ಎಸ್.ಹನುಮಂತರಾಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಿಬ್ಬಂದಿಗಳಾದ ಡಾ.ಅಹಲ್ಯ, ದಾಸರಾಜ್, ನವೀನ್, ಸುರೇಶ್ ಉಪಸ್ಥಿತರಿದ್ದರು. ಡಾ.ಎನ್.ಶ್ರೀಧರ್ ಸ್ವಾಗತಿಸಿದರು, ಜಯಲಕ್ಷ್ಮಮ್ಮ ವಂದಿಸಿದರು, ಕೃಷ್ಣಾನಾಯ್ಕ ಕಾರ್ಯಕ್ರಮ ನಿರೂಪಿಸಿದರು.