ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಸ್ ಇದ್ದವರಿಗೆ ಮಾತ್ರ ಪ್ರವೇಶ

Last Updated 7 ಅಕ್ಟೋಬರ್ 2012, 9:40 IST
ಅಕ್ಷರ ಗಾತ್ರ

ಬೆಳಗಾವಿ: ಸುವರ್ಣ ವಿಧಾನಸೌಧದ ಉದ್ಘಾಟನೆ ಅ. 11 ರಂದು ನಡೆಯಲಿದ್ದು, ಪಾಸ್ ಇದ್ದವರಿಗೆ ಮಾತ್ರ ಪ್ರವೇಶವಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂದೀಪ ಪಾಟೀಲ ತಿಳಿಸಿದ್ದಾರೆ.

ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸುವರ್ಣ ವಿಧಾನಸೌಧ ಕಟ್ಟಡ ಉದ್ಘಾಟನೆಗೆ ರಾಷ್ಟ್ರಪತಿಗಳು, ಮುಖ್ಯಮಂತ್ರಿಗಳು ಸೇರಿದಂತೆ ಗಣ್ಯಾತಿಗಣ್ಯರು ಆಗಮಿಸಲಿದ್ದಾರೆ. ಈ ಸಮಾರಂಭಕ್ಕೆ 20 ಸಾವಿರ ಪಾಸುಗಳನ್ನು ವಿತರಿಸಲಾಗುವುದು. ಜೊತೆಗೆ ವಾಹನಗಳಿಗೂ ಪಾಸ್ ನೀಡಲಾಗುವುದು. ಇವರಿಗೆ ಮಾತ್ರ ಪ್ರವೇಶವಿದ್ದು, ಈ ಸಂದರ್ಭದಲ್ಲಿ ಪೊಲೀಸರು ನಡೆಸುವ ತಪಾಸಣೆ ಕಾರ್ಯಕ್ಕೆ ಸಾರ್ವಜನಿಕರು ಸಹಕರಿಸಬೇಕು ಎಂದು ಅವರು ಕೋರಿದರು.

ಸುವರ್ಣ ವಿಧಾನಸೌಧದ ಉದ್ಘಾ ಟನಾ ಸಮಾರಂಭದ ನಂತರ ರಾಷ್ಟ್ರ ಪತಿಗಳು ನಗರದ ರಿಸಾಲ್ದಾರ ಗಲ್ಲಿಯ  ರಾಮಕೃಷ್ಣ ಆಶ್ರಮದಲ್ಲಿ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಈ ಕಾರ್ಯಕ್ರಮದಲ್ಲಿ 100 ರಿಂದ 150 ಜನ ಸ್ವಾಮೀಜಿಯವರಿಗೆ ಮಾತ್ರ ಪ್ರವೇಶವಿದ್ದು, ಸಾರ್ವಜನಿಕರಿಗೆ ಪ್ರವೇಶವಿಲ್ಲ.

ನಂತರ ರಾಷ್ಟ್ರಪತಿಗಳು ಗಾಂಧಿ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಡಾ. ಚಂದ್ರಶೇಖರ ಕಂಬಾರ ಅವರಿಗೆ ಜ್ಞಾನಪೀಠ ಪ್ರಶಸ್ತಿ ಪ್ರದಾನ ಮಾಡಲಿದ್ದು, ಈ ಕಾರ್ಯಕ್ರಮದಲ್ಲಿ ಪಾಸ್ ಹೊಂದಿದ ಸುಮಾರು 1200 ಜನರಿಗೆ ಮಾತ್ರ ಪ್ರವೇಶವಿದೆ. ಪಾಸ್ ಹೊಂದಿರದ ವ್ಯಕ್ತಿಗಳಿಗೆ ಪ್ರವೇಶವಿಲ್ಲ ಎಂದು ಸ್ಪಷ್ಟಪಡಿಸಿದರು.

ಅ. 11 ರಂದು ರಾಷ್ಟ್ರಪತಿಗಳು ಸೇರಿದಂತೆ ಅತೀ ಗಣ್ಯಾತಿಗಣ್ಯ ವ್ಯಕ್ತಿಗಳು ನಗರಕ್ಕೆ ಆಗಮಿಸುತ್ತಿದ್ದು, ವ್ಯಾಪಕ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮತ್ತು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ರಾಷ್ಟ್ರಪತಿಗಳು ಸುವರ್ಣ ವಿಧಾನಸೌಧ ಉದ್ಘಾಟನೆ ಕಾರ್ಯಕ್ರಮ ಸೇರಿದಂತೆ ನಾಲ್ಕು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದರು.
ಸುವರ್ಣ ವಿಧಾನಸೌಧ ಉದ್ಘಾಟನೆ ಸಮಾರಂಭಕ್ಕೆ ಆಗಮಿಸುವ ಗಣ್ಯ ವ್ಯಕ್ತಿಗಳು, ಚುನಾಯಿತ ಜನಪ್ರತಿ ನಿಧಿಗಳು ಮತ್ತು ಪತ್ರಿಕಾ ವರದಿಗಾರರಿಗೆ ಸುವರ್ಣ ವಿಧಾನ ಸೌಧದ ಮುಖ್ಯ ದ್ವಾರದಿಂದ ಪ್ರವೇಶ ಕಲ್ಪಿಸಲಾಗಿದೆ.
ಸಾರ್ವಜನಿಕರಿಗಾಗಿ ಸುವರ್ಣ ವಿಧಾನಸೌಧದ ದಕ್ಷಿಣ ದಿಕ್ಕಿನಲ್ಲಿರುವ ಎರಡು ದ್ವಾರಗಳ ಮೂಲಕ ಪ್ರವೇಶವನ್ನು ಕಲ್ಪಿಸಲಾಗಿದೆ. ಈ ಸದಂರ್ಭದಲ್ಲಿ ಮೋಬೈಲ್ ತರುವುದನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದರು.
ಉದ್ಘಾಟನಾ ಸಮಾರಂಭದ ನಂತರ ರಾಷ್ಟ್ರಪತಿಗಳು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದು, ಈ ಕಾರ್ಯಕ್ರಮದಲ್ಲಿ ಚುನಾಯಿ ಪ್ರತಿನಿಧಿಗಳು, ಅಧಿಕಾರಿಗಳು ಮತ್ತು ಪತ್ರಿಕಾ ವರದಿಗಾರರಿಗೆ ಮಾತ್ರ ಪ್ರವೇಶ ನೀಡಲಾಗುವುದು ಎಂದು ಹೇಳಿದರು.

ಗಣ್ಯ ವ್ಯಕ್ತಿಗಳ ಭದ್ರತೆ, ಸುಗಮ ಸಾರಿಗೆ ಸಂಚಾರದ ಅನುಕೂಲಕ್ಕಾಗಿ ಕೆಲವು ಮಾರ್ಗಗಳಲ್ಲಿ ಸಂಚಾರ ನಿಷೇಧ ಹಾಗೂ ಕೆಲವು ಮಾರ್ಗಗಳ ಸಂಚಾರ ಬದಲಾವಣೆಯ ವ್ಯವಸ್ಥೆ ಮಾಡಲಾಗಿದೆ. ಭದ್ರತೆಗಾಗಿ ನಾಲ್ವರು ಎಸ್‌ಪಿ, 14 ಮಂದಿ ಡಿಎಸ್‌ಪಿ, 50 ಮಂದಿ ಸಿಪಿಐ, 150 ಮಂದಿ ಪಿಎಸ್‌ಐ, 250 ಮಂದಿ ಎಎಸ್‌ಐ ಮತ್ತು 2000 ಪೊಲೀಸ್ ಸಿಬ್ಬಂದಿ ನಿಯೋಜಿ ಸಲಾಗಿದೆ. ಅಲ್ಲದೇ 30 ಲೋಹ ಶೋಧಕಗಳನ್ನು (ಮೆಟಲ್ ಡಿಟೆಕ್ಟರ್) ಅಳವಡಿಸಲಾಗಿದೆ. 8 ಶ್ವಾನ ದಳಗಳನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರು.
ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಎಚ್.ಗಂಗರೆಡ್ಡಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT