ಮಧುಗಿರಿ: ಅಂಗನವಾಡಿ ನೌಕರರಿಗೆ ಸರ್ಕಾರ ಈಗಾಗಲೇ ಒಪ್ಪಿರುವ ಅಂಶಗಳ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಸಿಐಟಿಯು ಹಾಗೂ ರಾಜ್ಯ ಅಂಗನವಾಡಿ ನೌಕರರ ಸಂಘದ ಸದಸ್ಯರು ಸೋಮವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.
ಅಂಗನವಾಡಿ ನೌಕರರಿಗೆ ಪಿಂಚಣಿ ನೀಡುವ ವಿಚಾರದಲ್ಲಿ ಸಿಐಟಿಯು ಹಾಗೂ ಅಂಗನವಾಡಿ ನೌಕರರ ಸಂಘವು ಸರ್ಕಾರಕ್ಕೆ ರಚನಾತ್ಮಕ ಸಲಹೆಗಳನ್ನು ನೀಡಿದೆ. ಇದನ್ನು ರಾಜ್ಯ ಸರ್ಕಾರ ಜಾರಿಗೊಳಿಸದಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇಂದಿಗೂ ವಿಳಂಬ ನೀತಿ ಅನುಸರಿಸುತ್ತಿರುವುದು ಏಕೆ ಎಂದು ತಿಳಿಯುತ್ತಿಲ್ಲ. ಕೂಡಲೇ ನೌಕರರ ಬೇಡಿಕೆಗಳನ್ನು ಒಪ್ಪಿಕೊಂಡು ಪಿಂಚಣಿ ಯೋಜನೆ ಜಾರಿಗೊಳಿಸಬೇಕು ಎಂದು ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ವರಲಕ್ಷ್ಮಿ ಆಗ್ರಹಿಸಿದರು. ಕೆಂದ್ರ ಸರ್ಕಾರದಿಂದ ನೌಕರರಿಗೆ ಹೆಚ್ಚಳವಾದ ಗೌರವಧನದ ಬಾಕಿ ಹಣವನ್ನು ತಕ್ಷಣ ಪಾವತಿಸಬೇಕು. ಕೇಂದ್ರ ಸರ್ಕಾರ ಐಸಿಡಿಎಸ್ ಯೋಜನೆಯನ್ನು ಹಂತ ಹಂತವಾಗಿ ಕೊಲ್ಲಲು ಹೊರಟಿದೆ ಎಂದು ಅರೋಪಿಸಿದರು.
ಶಾಲಾ ಪೂರ್ವ ಶಿಕ್ಷಣದ ಭಾಗವಾಗಿ ಅಂಗನವಾಡಿ ಶಿಕ್ಷಣವನ್ನು ಕಡ್ಡಾಯಗೊಳಿಸುವಂತೆ ಸಿಐಟಿಯು ಮುಖಂಡ ಸೈಯ್ಯದ್ ಮುಜೀಬ್ ಆಗ್ರಹ ಪಡಿಸಿದರು. ಪ್ರತಿಭಟನೆಯಲ್ಲಿ ಅಂಗನವಾಡಿ ನೌಕರರ ಸಂಘ ಹಾಗೂ ಸಿಐಟಿಯು ಘಟಕದ ಪದಾಧಿಕಾರಿಗಳು ಪಾಲ್ಗೊಂಡಿದ್ದರು.