ಚಿಂತಾಮಣಿ: ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳ ವೈಫಲ್ಯ ಹಾಗೂ ಪೆಟ್ರೋಲ್ ಬೆಲೆ ಏರಿಕೆ ವಿರೋಧಿಸಿ ಜೆಡಿಎಸ್ ಕಾರ್ಯಕರ್ತರು ಸೋಮವಾರ ನಗರದಲ್ಲಿ ಎತ್ತಿನ ಗಾಡಿ, ಸೈಕಲ್ ಮೆರವಣಿಗೆ ಮೂಲಕ ಪ್ರತಿಭಟನೆ ನಡೆಸಿದರು.
ನಗರದ ಹೊರವಲಯದ ಕನಂಪಲ್ಲಿ ಸಮೀಪದಿಂದ ಸೈಕಲ್ಗಳು ಮತ್ತು ಎತ್ತಿನ ಗಾಡಿಗಳ ಮೂಲಕ ಹೊರಟ ಪ್ರತಿಭಟನಾ ಮೆರವಣಿಗೆ ಜೋಡಿ ರಸ್ತೆ, ಬೆಂಗಳೂರು ವೃತ್ತ, ಗಜಾನನ ವೃತ್ತ, ಪಿ.ಸಿ.ಆರ್ ಕಾಂಪ್ಲೆಕ್ಸ್, ಚೇಳೂರು ವೃತ್ತದ ಮೂಲಕ ಮತ್ತೆ ಜೋಡಿ ರಸ್ತೆಯಲ್ಲಿ ಸಾಗಿ ತಹಶೀಲ್ದಾರ್ ಕಚೇರಿಗೆ ತಲುಪಿತು.
ಜೆಡಿಎಸ್ ಮುಖಂಡ ಜೆ.ಕೆ.ಕೃಷ್ಣಾ ರೆಡ್ಡಿ ಮಾತನಾಡಿ, ಕೇಂದ್ರ ಸರ್ಕಾರ ಜನಸಾಮಾನ್ಯರ ಹಿತವನ್ನು ಕಡೆಗಣಿಸಿ ಪದೇ ಪದೇ ಇಂಧನ ಬೆಲೆ ಏರಿಸುತ್ತಿರು ವುದನ್ನು ಖಂಡಿಸಿದರು. ಎಲ್ಲ ಅಗತ್ಯ ವಸ್ತುಗಳ ಬೆಲೆ ಹೆಚ್ಚಳಗೊಂಡಿದ್ದು, ಬಡವರು, ಮಧ್ಯಮ ವರ್ಗದವರು ಜೀವನ ನಡೆಸಲು ಪರದಾಡುವಂತಾಗಿದೆ ಎಂದರು.
ಕೇಂದ್ರ ಸರ್ಕಾರದ ಅಸಮರ್ಪಕ ನೀತಿಗಳಿಂದಾಗಿ ದಿನೇದಿನೇ ಜನಸಾಮಾನ್ಯರ ಆದಾಯ ಕಡಿಮೆಯಾಗುತ್ತಿದ್ದು ಸಾರಿಗೆ, ವಿದ್ಯುತ್, ದಿನನಿತ್ಯದ ಅಗತ್ಯ ವಸ್ತುಗಳ ಬೆಲೆಗಳು ನಾಗಾಲೋಟದಲ್ಲಿ ಹೆಚ್ಚುತ್ತಿದೆ. ಕೇಂದ್ರ ಸರ್ಕಾರವು ಕೂಡಲೇ ಇಂಧನ ಬೆಲೆ ಇಳಿಸಬೇಕು ಎಂದು ಆಗ್ರಹಿಸಿದರು.
ಕೇಂದ್ರ ಸರ್ಕಾರದತ್ತ ಬೊಟ್ಟು ಮಾಡಿ ರಾಜ್ಯ ಸರ್ಕಾರ ಕೈಕಟ್ಟಿ ಕುಳಿತಿರುವುದು ಸರಿಯಲ್ಲ. ರಾಜ್ಯ ಸರ್ಕಾರವು ಇಂಧನ ಮೇಲೆ ಹೆಚ್ಚು ತೆರಿಗೆ ವಿಧಿಸಿದೆ. ರಾಜ್ಯ ಸರ್ಕಾರವೂ ಬೆಲೆ ಇಳಿಸಲು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಮ್ಮನ್ನು ಭೇಟಿ ಮಾಡಲು ಬಂದಿದ್ದ ಮುಖ್ಯಮಂತ್ರಿ ಸದಾನಂದಗೌಡ ಅವರನ್ನು ಮೂರು ಗಂಟೆ ಕಾಲ ಮಾತನಾಡದೇ ಕಾಯಿಸಿರುವುದು ರಾಜ್ಯದ 6 ಕೋಟಿ ಜನರಿಗೆ ಮಾಡಿದ ಅವಮಾನ ಎಂದು ಟೀಕಿಸಿದರು.
ಇಂಧನ ಬೆಲೆ ಹಾಗೂ ಹೆಚ್ಚುತ್ತಿರುವ ಅಗತ್ಯ ವಸ್ತುಗಳ ಬೆಲೆಯನ್ನು ಇಳಿಸಲು ಸರ್ಕಾರ ಕ್ರಮ ಕೈಗೊಂಡು ಬಡವರು ಹಾಗೂ ಮಧ್ಯಮ ವರ್ಗದವರು ನಿರಾತಂಕವಾಗಿ ಜೀವನ ನಡೆಸಲು ಅನುವು ಮಾಡಿಕೊಡಬೇಕು ಎಂದು ಒತ್ತಾಯಿಸಿದ ಮನವಿ ಪತ್ರವನ್ನು ತಹಶೀಲ್ದಾರ್ ಮೂಲಕ ಪ್ರಧಾನ ಮಂತ್ರಿಗೆ ಸಲ್ಲಿಸಲಾಯಿತು.
ಪುರಸಭೆ ಮಾಜಿ ಅಧ್ಯಕ್ಷ ವಿ.ಸುಬ್ಬಾರೆಡ್ಡಿ, ಮುಖಂಡರಾದ ಬಿ.ಜಿ.ನಾರಾಯಣಸ್ವಾಮಿ, ವೆಂಕಟರೆಡ್ಡಿ, ನಾಗರಾಜರೆಡ್ಡಿ, ಬೈರಾರೆಡ್ಡಿ, ಶಿವಾರೆಡ್ಡಿ, ವಿ.ಅಮರ್ ಮತ್ತಿತರರು ಪತ್ರಿಭಟನೆಯಲ್ಲಿ ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.