ಕುಷ್ಟಗಿ: ಪಟ್ಟಣದಲ್ಲಿ ಬುಧವಾರ ಸಿಐಟಿಯು ನೇತೃತ್ವದಲ್ಲಿ ವಿವಿಧ ಕಾರ್ಮಿಕ ಸಂಘಟನೆಗಳು ಕರೆಮೇರೆಗೆ ಪ್ರತಿಭಟನೆ ನಡೆಸುತ್ತಿದ್ದವರನ್ನು ಸರಕುಸಾಗಣೆ ವಾಹನದಲ್ಲಿ ಸಾಗಿಸಿದ ಪೊಲೀಸರ ಕ್ರಮಕ್ಕೆ ಸಾರ್ವಜನಿಕರ ಕ್ರಮವನ್ನು ಸಾರ್ವಜನಿಕರು ಆಕ್ಷೇಪಿಸಿದರು.
ಅಂಗನವಾಡಿ ಕಾರ್ಯಕರ್ತೆಯರು, ರೈತ, ಕಾರ್ಮಿಕ ಸಂಘಟನೆಗಳ ಪ್ರಮುಖರು ಸೇರಿದಂತೆ ರಾಷ್ಟ್ರೀಯ ಹೆದ್ದಾರಿ ಸಮೀಪ ರಾಜ್ಯ ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿದ ಸುಮಾರು 39 ಜನ ಪ್ರತಿಭಟನಾಕಾರರನ್ನು ಬಂಧಿಸಿದ ಪೊಲೀಸರು ಅವರನ್ನೆಲ್ಲ ಖಾಸಗಿ ಗೂಡ್ಸ್ಗಾಡಿಗಳಲ್ಲಿ ಹತ್ತಿಸಿ ಠಾಣೆಗೆ ಕರೆದುಕೊಂಡು ಹೋದರು.
ಸರಕುಸಾಗಣೆ ವಾಹನದಲ್ಲಿ ಜನರನ್ನು ಹತ್ತಿಸಿಕೊಳ್ಳುವುದು ಕಾನೂನುಬಾಹಿರ ಎಂದು ವಾಹನ ಮಾಲೀಕರ ಮೇಲೆ ಪ್ರಕರಣ ದಾಖಲಿಸುವ ಪೊಲೀಸರು ತಾವು ಮಾತ್ರ ಪ್ರತಿಭಟನಾಕಾರರನ್ನು ಕರೆದೊಯ್ಯಲು ಕಾನೂನು ಉಲ್ಲಂಘಿ ಸಿದ್ದು ಸರಿಯೆ ಎಂದು ಪ್ರಶ್ನಿಸಿದರು.
ಸಾರ್ವಜನಿಕರ ಆಕ್ಷೇಪಕ್ಕೆ ಸಂಬಂಧಿಸಿದಂತೆ ಸಬ್ಇನ್ಸ್ಪೆಕ್ಟರ್ ಮಹಾದೇವ ಪಂಚಮುಖಿ ಅವರನ್ನು ಕೇಳಿದಾಗ, `ಯಾವುದೇ ಮಾಹಿತಿ ನೀಡದೇ ಏಕಾಏಕಿ ಪ್ರತಿಭಟನೆ ನಡೆಸಲಾಗುತ್ತಿತ್ತು, ರಸ್ತೆ ತಡೆ ನಡೆಸಿದ್ದರಿಂದ ಸಂಚಾರ ವ್ಯವಸ್ಥೆ ಸ್ಥಗಿತಗೊಂಡಿತ್ತು. ರಸ್ತೆ ತೆರವುಗೊಳಿಸುವ ಸಲುವಾಗಿ ಅನಿವಾರ್ಯ ಪರಿಸ್ಥಿತಿಯಲ್ಲಿ ಖಾಸಗಿ ಗೂಡ್ಸ್ ವಾಹನದಲ್ಲಿ ಬಂಧಿತರನ್ನು ಕರೆತರಲಾಯಿತು ಎಂದು ಸ್ಪಷ್ಟಪಡಿಸಿದರು.