ಲಖನೌ (ಪಿಟಿಐ): ಅತ್ಯಾಚಾರಕ್ಕೆ ಒಳಗಾದ ಅಪ್ರಾಪ್ತ ವಯಸ್ಸಿನ ದಲಿತ ಯುವತಿಯ ಮೇಲೆ ಸುಳ್ಳು ಪ್ರಕರಣ ದಾಖಲಿಸಿ ಆಕೆಯನ್ನು ಜೈಲಿಗೆ ಹಾಕಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಉತ್ತರ ಪ್ರದೇಶ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗ (ಎನ್ಸಿಎಸ್ಸಿ)ದ ಅಧ್ಯಕ್ಷ ಪಿ.ಎಲ್. ಪುನಿಯಾ ಒತ್ತಾಯಿಸಿದ್ದಾರೆ.
‘ಬಾಲಕಿಯ ಮೇಲೆ ಅತ್ಯಾಚಾರ ಎಸಗಿದವರ ವಿರುದ್ಧ ದೂರು ದಾಖಲಿಸಿಕೊಂಡ ಮೇಲೂ ಆಕೆ ವಿರುದ್ಧ ಸುಳ್ಳು ಆಪಾದನೆ ಹೊರಿಸಿ ಜೈಲಿಗೆ ಹಾಕಿದ ಬಾಂದ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಅವರ ಅಧೀನ ಅಧಿಕಾರಿಗಳ ಮೇಲೆ ಮೊದಲು ಪ್ರಕರಣ ದಾಖಲು ಮಾಡಿಕೊಳ್ಳಬೇಕು’ ಎಂದು ಹೇಳಿದ್ದಾರೆ.
ಉಪವಾಸ ಸತ್ಯಾಗ್ರಹ ಬೆದರಿಕೆ: ಅತ್ಯಾಚಾರಕ್ಕೆ ಒಳಗಾದ ಅಪ್ರಾಪ್ತ ವಯಸ್ಸಿನ ದಲಿತ ಯುವತಿಯು ತನ್ನ ಮನೆಯನ್ನು ಪೊಲೀಸರು ಸುತ್ತುವರಿದಿದ್ದು, ಗೃಹ ಬಂಧನದಲ್ಲಿ ಇಟ್ಟಿದ್ದಾರೆ. ಆದ್ದರಿಂದ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಬೆದರಿಕೆ ಹಾಕಿದ್ದ ಆಕೆ ನಂತರ ತನ್ನ ನಿಲುವಿನಿಂದ ಹಿಂದೆ ಸರಿದಿದ್ದಾಳೆ.