ಪಾಂಡವಪುರ: ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆಗೆ ಕಬ್ಬು ಸರಬರಾಜು ಮಾಡುತ್ತಿಲ್ಲ ಎಂಬ ಕಾರಣದಿಂದ ಲಾರಿ ಮತ್ತು ಎತ್ತಿನಗಾಡಿಗಳ ಮೂಲಕ ಬೇರೆ ಕಾರ್ಖಾನೆಗೆ ಕಬ್ಬು ಸರಬರಾಜು ಮಾಡುತ್ತಿದ್ದ ರೈತರನ್ನು ತಡೆದ ಪೊಲೀಸರ ವಿರುದ್ಧ ರೈತರು ಒಂದು ಗಂಟೆ ಕಾಲ ರಸ್ತೆ ನಡೆಸಿ ಪ್ರತಿಭಟಿಸಿದ ಘಟನೆ ಪಟ್ಟಣದಲ್ಲಿ ಶುಕ್ರವಾರ ನಡೆದಿದೆ.
ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆಗೆ ಕಬ್ಬು ಸರಬರಾಜು ಮಾಡದೇ ಬನ್ನಾರಿ ಷುಗರ್ಸ್ ಕಂಪೆನಿ ಹಾಗೂ ಕೊಪ್ಪ ಕಾರ್ಖಾನೆಗೆ ರೈತರು ಕಬ್ಬು ಸರಬರಾಜು ಮಾಡುತ್ತಿದ್ದ ಲಾರಿಯನ್ನು ತಡೆದ ಕಂದಾಯ ಇಲಾಖೆ ಹಾಗೂ ಪೊಲೀಸರ ವಿರುದ್ಧ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ರೈತರು ಹಾಗೂ ಪೊಲೀಸರ ನಡುವೆ ತೀವ್ರ ಮಾತಿನ ಚಕಮಕಿ ನಡೆಯಿತು. ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಆಗಮಿಸಬೇಕು ಎಂದು ರೈತರು ಪಟ್ಟು ಹಿಡಿದರು. ನಂತರ ಪೊಲೀಸ್ ಸಬ್ಇನ್ಸ್ಪೆಕ್ಟರ್ ಅಜರುದ್ದೀನ್ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ದೂರವಾಣಿ ಮೂಲಕ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು. ಸಮಸ್ಯೆ ಬಗೆಹರಿಸುವುದಾಗಿ ಅಧಿಕಾರಿಗಳು ಭರವಸೆ ನೀಡಿದ ಮೇಲೆ ರೈತರು ಪ್ರತಿಭಟನೆ ಹಿಂಪಡೆದರು. ಪ್ರತಿಭಟನೆಯಲ್ಲಿ ಜವರೇ ಗೌಡ, ಬಾಲಗಂಗಾಧರ್, ಎಚ್.ಕೆ. ರಮೇಶ್, ಚನ್ನೇಗೌಡ, ವೆಂಕಟೇಶ್ ಇತರರು ರೈತರು ಭಾಗವಹಿಸಿದ್ದರು.