ಹಾಸನ: `ತಮ್ಮ ಜೀವದ ಹಂಗನ್ನು ತೊರೆದು ಸಮಾಜದ ಶಾಂತಿ ಸುವ್ಯವಸ್ಥೆ ಕಾಪಾಡಲು ಶ್ರಮಿಸುತ್ತಿರುವ ಪೊಲೀಸರ ಸೇವೆ ಶ್ಲಾಘನೀಯವಾದುದು. ಕರ್ತವ್ಯದಲ್ಲಿರುವಾಗಲೇ ಪೊಲೀಸರು ಮರಣ ಹೊಂದುವ ವಿಚಾರ ಅತ್ಯಂತ ದುಃಖ ತರಿಸುವಂಥದ್ದು~ ಎಂದು ಜಿಲ್ಲಾಧಿಕಾರಿ ಡಾ. ಕೆ.ಜಿ. ಜಗದೀಶ್ ನುಡಿದರು.
ಪೊಲೀಸ್ ಹುತಾತ್ಮರ ದಿನಾಚರಣೆ ಅಂಗವಾಗಿ ಶುಕ್ರವಾರ ಹಾಸನ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಛ ಅರ್ಪಿಸಿ ಮಾತನಾಡಿದರು.
`ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಪೊಲೀಸ್ ಸಿಬ್ಬಂದಿಗೆ ತಮ್ಮನ್ನು ರಕ್ಷಣೆ ಮಾಡಿಕೊಳ್ಳಲು ಸಾಕಷ್ಟು ವ್ಯವಸ್ಥೆ ಇಲ್ಲ. ಪೊಲೀಸರಿಗೆ ಉತ್ತಮ ತರಬೇತಿ, ಅತ್ಯಾಧುನಿಕ ಸಲಕರಣೆಗಳನ್ನು ನೀಡುವುದು ಅಗತ್ಯ. ಮಾತ್ರವಲ್ಲದೆ ಪೊಲೀಸ್ ಇಲಾಖೆಯಲ್ಲಿ ಸಿಬ್ಬಂದಿ ಕೊರತೆಯನ್ನೂ ನೀಗಿಸ ಬೇಕಾಗಿದೆ.ಯಾವುದೇ ಕಾರ್ಯಾಚರಣೆ ಇರಲಿ ಮೊದಲೇ ಸಿದ್ಧತೆ ಮಾಡಿಕೊಂಡು ಎಲ್ಲರೂ ಒಟ್ಟಾಗಿ ಕಾರ್ಯ ನಿರ್ವಹಿಸಬೇಕು ಎಂದರು.
ಜಿಲ್ಲೆಯಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುತ್ತಿರುವ ಪೊಲೀಸ್ ಇಲಾಖೆಗೆ ಅಭಿನಂದನೆ ತಿಳಿಸಿದ ಜಿಲ್ಲಾಧಿಕಾರಿ, ದೇಶಕ್ಕೋಸ್ಕರ ತ್ಯಾಗ ಬಲಿದಾನ ಮಾಡಿದ ಪೊಲೀಸ್ ಸಿಬ್ಬಂದಿಯ ಕುಟುಂಬ ವರ್ಗದವರಿಗೆ ಭಗವಂತ ನೆಮ್ಮದಿ ಬದುಕು ನೀಡಲಿ ಎಂದು ಹಾರೈಸಿದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಚಂಗಪ್ಪ ಮಾತನಾಡಿ, `1961ರಿಂದ 92ರವರೆಗೆ 21 ಸಾವಿರಕ್ಕೂ ಹೆಚ್ಚು ಪೊಲೀಸರು ವೀರ ಮರಣ ಹೊಂದಿದ್ದಾರೆ. 1992ರಿಂದ 2011ರವರೆಗೆ 9 ಸಾವಿರ ಮಂದಿ ವೀರ ಮರಣ ಹೊಂದಿದ್ದಾರೆ. ಪೊಲೀಸ್ ಸಿಬ್ಬಂದಿ ಸಾವಿನ ಪ್ರಮಾಣ ಹೆಚ್ಚುತ್ತಲೇ ಹೋಗುತ್ತಿದೆ. ದುಷ್ಟ ಶಕ್ತಿಗಳ ವಿರುದ್ಧ ಕಾರ್ಯಾಚರಣೆ ನಡೆ ಸಲು ಸುಸಜ್ಜಿತ ಹಾಗೂ ಅತ್ಯಾಧುನಿಕ ಉಪಕರಣಗಳನ್ನು ನೀಡುವುದು ಅಗತ್ಯ. ಕರ್ತವ್ಯದಲ್ಲಿದ್ದಾಗ ಮಡಿದ ಪೊಲೀಸರನ್ನು ಗೌರವಿಸುವುದು ಸಮಾಜದ ಕರ್ತವ್ಯ~ ಎಂದರು.
ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಎಸ್.ಟಿ.ಅಂಜನ್ ಕುಮಾರ್, `ಸಮಾಜ ಘಾತುಕ ಶಕ್ತಿ ಯೊಂದಿಗೆ ಹೋರಾಡಿ ಪ್ರಾಣ ಕಳೆದುಕೊಂಡು ಹುತಾತ್ಮರಾದ ಪೊಲೀಸರ ಕುಟುಂಬದವರಿಗೆ ಸರ್ಕಾರ ಸೌಲಭ್ಯ ಕೊಟ್ಟರೆ ಮಾತ್ರ ಅವರ ಆತ್ಮಕ್ಕೆ ಶಾಂತಿ ದೊರೆಯುತ್ತದೆ~ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಸಿಂಗ್ `ಕಳೆದ ವರ್ಷ ಕರ್ನಾಟಕದ 10 ಜನ ಸೇರಿದಂತೆ ದೇಶದಲ್ಲಿ 636 ಮಂದಿ ಪೊಲೀಸರು ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಕಾರ್ಯ ನಿರ್ವಹಿಸಿ ವೀರ ಮರಣ ಹೊಂದಿದ್ದಾರೆ. ಹುತಾ ತ್ಮರಿಗೆ ಶ್ರದ್ಧಾಂಜಲಿ ಅರ್ಪಿಸುವುದು ನಮ್ಮೆಲರ್ಲ ಕರ್ತವ್ಯ~ ಎಂದರು.
ನಗರಸಭೆ ಆಧ್ಯಕ್ಷ ಸಿ.ಆರ್.ಶಂಕರ್, ಪೊಲೀಸ್ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಮತ್ತಿತರರು ಸ್ಮಾರಕಕ್ಕೆ ಪುಷ್ಪ ಗುಚ್ಛ ಅರ್ಪಿಸಿ ನಮನ ಸಲ್ಲಿಸಿದರು. ಡಿ.ವೈ.ಎಸ್.ಪಿ. ಚನ್ನಬಸಪ್ಪ ವಂದಿಸಿದರು. ಸ್ವರೂಪ ನಿರೂಪಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.