ನಾಪೋಕ್ಲು: ಪೋಡಿ ಆಂದೋಲನ ಕಾರ್ಯಕ್ರಮ ಯಶಸ್ವಿಯಾಗಿ ನಡೆಯ ಬೇಕಾದರೆ ಚುನಾಯಿತ ಪ್ರತಿನಿಧಿಗಳೂ ಸೇರಿದಂತೆ ಎಲ್ಲಾ ಸಾರ್ವಜನಿಕರ ಸಹಕಾರ ಅಗತ್ಯವಿದೆ ಎಂದು ವಿಧಾನ ಸಭಾಧ್ಯಕ್ಷ ಕೆ.ಜಿ.ಬೋಪಯ್ಯ ಹೇಳಿದರು.
ಇಲ್ಲಿನ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ರಾಜ್ಯ ಸರ್ಕಾರದ ಪೋಡಿ ಆಂದೋಲನ ಕಾರ್ಯಕ್ರಮ ವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದ ಅವರು 2012ರ ಮಾರ್ಚ್ ಒಳಗೆ ನಾಪೋಕ್ಲು ಹೋಬಳಿಯಲ್ಲಿ ಬಾಕಿ ಇರುವ ಎಲ್ಲಾ ಪ್ರಕರಣಗಳನ್ನು ಇತ್ಯರ್ಥಗೊಳಿಸಲು ಯೋಜನೆ ರೂಪಿಸಲಾಗಿದೆ ಪೋಡಿ ಆಂದೋಲನ ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆಯಲ್ಲಿ ಜಾಗಕ್ಕೆ ಸಂಬಂಧಪಟ್ಟ ಸಮಸ್ಯೆಗಳಿದ್ದಲ್ಲಿ ಜನ ಪ್ರತಿನಿಧಿಗಳು ಕಂದಾಯ ಅಧಿಕಾರಿಗಳು ಸ್ಥಳದಲ್ಲಿಯೇ ಪರಿಹರಿಸಿಕೊಳ್ಳಬೇಕು ಎಂದರು.
ಉಪವಿಭಾಗಾಧಿಕಾರಿ ಡಾ.ಎಂ.ಆರ್ ರವಿ ಕಂದಾಯ ಇಲಾಖೆಯಲ್ಲಿ ನೆನೆಗುದಿಗೆ ಬಿದ್ದಿರುವ ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಸರ್ಕಾರದ ಯೋಜನೆಯ ಪ್ರಕಾರ ಸರ್ವೆ ಅಧಿಕಾರಿಗಳು ಹಾಗೂ ಕಂದಾಯ ಅಧಿಕಾರಿಗಳು ಜನರ ಬಳಿಗೆ ತೆರಳಿ ಅವರ ಜಾಗದ ಸಮಸ್ಯೆಗಳನ್ನು ಪರಿ ಹರಿಸಬೇಕಾಗಿದೆ.
ರಾಜ್ಯದಲ್ಲಿ ಮೊದಲ ಹಂತದಲ್ಲಿ ಆಯ್ದುಕೊಂಡ 71 ತಾಲೂಕುಗಳಲ್ಲಿ ಕೊಡಗು ಜಿಲ್ಲೆಯ ನಾಪೋಕ್ಲು ಹೋಬಳಿಯಲ್ಲಿ ಪ್ರಥಮ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, 5 ಗ್ರಾಮ ಪಂಚಾಯ್ತಿಗೆ ಸೇರಿದ 24 ಗ್ರಾಮಗಳ 1500 ಕಡತಗಳು ವಿಲೇವಾರಿ ಆಗಲಿವೆ ಎಂದರು.
ಗ್ರಾ.ಪಂ ಅಧ್ಯಕ್ಷ ಸಲೀಂ ಹ್ಯಾರೀಸ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಹೆಚ್ಚುವರಿ ಜಿಲ್ಲಾಧಿಕಾರಿ ಚಂದ್ರೇಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ.ಟಿ, ಪ್ರದೀಪ್, ಜಿ.ಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿಯ ಮಾಜಿ ಅಧ್ಯಕ್ಷ ಮನುಮುತ್ತಪ್ಪ, ತಾ.ಪಂ ಸದಸ್ಯ ನೆರವಂಡ ಉಮೇಶ್, ಜಿ.ಪಂ ಸದಸ್ಯೆ ಬೊಳ್ಳಮ್ಮನಾಣಯ್ಯ, ಜಿ.ಪಂ ಸದಸ್ಯೆ ಉಷಾದೇವಮ್ಮ ಹಾಜರಿದ್ದರು.