ಹೇಮಶ್ರೀ ಸಾವಿನ ಸುತ್ತ..
ಬೆಂಗಳೂರು: ಕಿರುತೆರೆ ನಟಿ ಹೇಮಶ್ರೀ ಅವರ ಶವಪರೀಕ್ಷೆ ನಡೆಸಿದ್ದ ನಗರದ ವಿಕ್ಟೋರಿಯಾ ಆಸ್ಪತ್ರೆ ವೈದ್ಯರು ಒಂದೆರಡು ದಿನಗಳಲ್ಲಿ ಮರಣೋತ್ತರ ಪರೀಕ್ಷೆಯ ಅಂತಿಮ ವರದಿ ನೀಡುವ ಸಾಧ್ಯತೆ ಇದೆ ಎಂದು ಉನ್ನತ ಪೊಲೀಸ್ ಮೂಲಗಳು ತಿಳಿಸಿವೆ.
`ವೈದ್ಯರು ವಿಧಿವಿಜ್ಞಾನ ಪ್ರಯೋಗಾಲಯ (ಎಫ್ಎಸ್ಎಲ್) ತಜ್ಞರ ವರದಿಗಾಗಿ ಕಾಯುತ್ತಿದ್ದಾರೆ. ಎಫ್ಎಸ್ಎಲ್ ವರದಿ ಆಧರಿಸಿ ಅವರು ಮರಣೋತ್ತರ ಪರೀಕ್ಷೆ ವರದಿ ನೀಡಲಿದ್ದಾರೆ. ಆ ನಂತರವಷ್ಟೇ ಸಾವಿನ ನಿಖರ ಕಾರಣ ಏನೆಂಬುದು ಗೊತ್ತಾಗಲಿದೆ~ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು `ಪ್ರಜಾವಾಣಿ~ಗೆ ತಿಳಿಸಿದರು.
ಈ ನಡುವೆ ಅಸ್ಥಿ ವಿಸರ್ಜನೆಗಾಗಿ ವಾರಣಾಸಿಗೆ ತೆರಳಿರುವ ಹೇಮಶ್ರೀ ಪೋಷಕರು ಮಂಗಳವಾರ ಬೆಳಿಗ್ಗೆ ನಗರಕ್ಕೆ ವಾಪಸ್ ಬರುವ ನಿರೀಕ್ಷೆ ಇದೆ. ಅವರನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲು ನಿರ್ಧರಿಸಲಾಗಿದೆ. ಪೋಷಕರ ವಿಚಾರಣೆಯ ಬಳಿಕ ಪ್ರಕರಣದ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿದೆ ಎಂದು ಅವರು ಮಾಹಿತಿ ನೀಡಿದರು.
ಸುರೇಂದ್ರ ಬಾಬು ಅವರ ಕಾರು ಚಾಲಕ ಸತೀಶ್ ನಗರದಲ್ಲೇ ತಲೆಮರೆಸಿಕೊಂಡಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಸಂಬಂಧಿಕರ ಮೂಲಕ ಆತನನ್ನು ಸಂಪರ್ಕಿಸಲು ಪ್ರಯತ್ನ ನಡೆಸಲಾಗಿದೆ ಎಂದು ತನಿಖಾಧಿಕಾರಿಗಳು ಹೇಳಿದ್ದಾರೆ.