ಬೇಲೂರು: ’ಸ್ಥಳೀಯ ಸಂಸ್ಥೆಗಳಲ್ಲಿ ದುಡಿಯುತ್ತಿರುವ ಅಸಂಘಟಿತ ವರ್ಗಕ್ಕೆ ಸೇರಿರುವ ಪೌರ ಕಾರ್ಮಿಕರನ್ನು ಸರ್ಕಾರ ಕಾಯಂಗೊಳಿಸಿ ಉತ್ತಮ ಸೌಲಭ್ಯಗಳನ್ನು ಕಲ್ಪಿಸಬೇಕು’ ಎಂದು ವಿಧಾನ ಪರಿಷತ್ ಸದಸ್ಯ ಪಟೇಲ್ ಶಿವರಾಂ ಹೇಳಿದರು.
ಪುರಸಭೆ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪೌರಕಾರ್ಮಿಕರಿಗೆ ಸಂಬಂಧಿಸಿದ ಸಮಸ್ಯೆಗಳು ಸಾಕಷ್ಟಿವೆ. ಇವುಗಳನ್ನು ಶಾಸನ ಸಭೆಯಲ್ಲಿ ಚರ್ಚೆ ಮಾಡ ಬೇಕಾಗಿದೆ. ಈ ನಿಟ್ಟಿನಲ್ಲಿ ತಾವು ಮುಂದಿನ ಅಧಿವೇಶನದಲ್ಲಿ ಚರ್ಚಿಸುವುದಾಗಿ ಹೇಳಿದರು.
ಶಾಸಕ ವೈ.ಎನ್.ರುದ್ರೇಶ್ಗೌಡ ಮಾತನಾಡಿ, ಪೌರ ಕಾರ್ಮಿಕರಿಗೆ ಸೂಕ್ತ ವೇತನ ಮತ್ತು ಸೌಲಭ್ಯ ಕಲ್ಪಿಸಲು ಸರ್ಕಾರ ವಿಫಲವಾಗಿದೆ ಎಂದರು. ಉಪಾಧ್ಯಕ್ಷೆ ಎಚ್.ಆರ್.ಸುಮಿತ್ರ, ತಹಶೀಲ್ದಾರ್ ಪಿ.ಜಿ.ನಟರಾಜ್ ಹಾಜರಿದ್ದರು. ಪೌರ ಕಾರ್ಮಿಕರಾದ ಯಂಕಟಯ್ಯ, ನಾಗರಾಜು, ತಮ್ಮಣ್ಣಿ, ಆಲ್ ಅಜರತ್ ಅವರನ್ನು ಸನ್ಮಾನಿಸಲಾಯಿತು. ಶೇ.22.75 ಯೋಜನೆಯ ಫಲಾನುಭವಿಗಳಿಗೆ ಸವಲತ್ತು ವಿತರಿಸಲಾಯಿತು. ಮುಖ್ಯಾಧಿಕಾರಿ ಸುರೇಶ್ ಬಾಬು ಸ್ವಾಗತಿಸಿದರು. ಆರೋಗ್ಯಾಧಿಕಾರಿ ವೆಂಕಟೇಶ್ ವಂದಿಸಿದರು.