ಬೆಂಗಳೂರು: ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದ ಲೋಕಾಯುಕ್ತ ವರದಿಯಲ್ಲಿ ಹೆಸರಿಸಲಾಗಿರುವ ಜನಾರ್ದನ ರೆಡ್ಡಿ ಸಹೋದರರು, ಶ್ರೀರಾಮುಲು ಮತ್ತು ಸಚಿವ ವಿ.ಸೋಮಣ್ಣ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಸದಸ್ಯರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
`ಸೋಮಣ್ಣ, ಜನಾರ್ದನ ರೆಡ್ಡಿ ಸಹೋದರರು ಹಾಗೂ ಶ್ರೀರಾಮುಲು ಅವರು ಅಕ್ರಮ ಗಣಿಗಾರಿಕೆಯಲ್ಲಿ ಭಾಗಿಯಾಗಿರುವುದು ಲೋಕಾಯುಕ್ತ ವರದಿಯಿಂದ ದೃಢಪಟ್ಟಿದೆ. ಲೋಕಾಯುಕ್ತರು ವರದಿ ನೀಡಿ ಎರಡು ತಿಂಗಳು ಕಳೆದಿದ್ದರೂ ಸರ್ಕಾರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡಿಲ್ಲ~ ಎಂದು ಪ್ರತಿಭಟನಾಕಾರರು ದೂರಿದರು.
ವರದಿಯಲ್ಲಿ ಸೂಚಿಸಿರುವ ತಪ್ಪಿತಸ್ಥರ ವಿರುದ್ಧ ಸರ್ಕಾರ ಶಿಸ್ತು ಕ್ರಮ ಜರುಗಿಸುವ ಬದಲು ಅವರನ್ನು ರಕ್ಷಿಸಲು ಯತ್ನಿಸುತ್ತಿದೆ. ಅಲ್ಲದೇ ವರದಿಯನ್ನು ಜಾರಿಗೊಳಿಸಲು ವಿಳಂಬ ಮಾಡುತ್ತಿದೆ ಎಂದು ಅವರು ಆರೋಪಿಸಿದರು.
ವರದಿಯಲ್ಲಿ ತಿಳಿಸಲಾಗಿರುವ ಭ್ರಷ್ಟ ಅಧಿಕಾರಿಗಳನ್ನು ಸೇವೆಯಿಂದ ಕೂಡಲೇ ಅಮಾನತು ಮಾಡಬೇಕು ಮತ್ತು ಬಂಧಿಸಬೇಕು ಎಂದು ಪ್ರತಿಭಟನಾನಿರತರು ಒತ್ತಾಯಿಸಿದರು.