ಚಿಕ್ಕಮಗಳೂರು: ಯಾವುದೇ ಪಕ್ಷ ಮತ್ತು ಅಭ್ಯರ್ಥಿಗಳ ಪರವಾಗಿ ಸರ್ಕಾರಿ ನೌಕರರು ಪ್ರಚಾರ ನಡೆಸುವ ದುಸ್ಸಾಹಸಕ್ಕೆ ಕೈಹಾಕಿರುವುದು ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ವಿ.ಯಶವಂತ್ ಎಚ್ಚರಿಕೆ ನೀಡಿದರು.
ಕುವೆಂಪು ಕಲಾ ಮಂದಿರದಲ್ಲಿ ಬುಧವಾರ ನಡೆದ ಮತದಾರರಲ್ಲಿ ಜಾಗೃತಿ ಆಂದೋಲನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಜಿಲ್ಲೆಯಲ್ಲಿ ಹೊಸದಾಗಿ 26 ಸಾವಿರ ಮಂದಿ ಮತದಾರರನ್ನು ನೋಂದಾಯಿಸಿಕೊಳ್ಳಲಾಗಿದೆ. ಇತ್ತೀಚಿನ ದಿನಗಳಲ್ಲಿ ಮತದಾನದಲ್ಲಿ ಮತದಾರರು ಪಾಲ್ಗೊಳ್ಳುವಿಕೆ ಕಡಿಮೆಯಾಗುತ್ತಿರುವುದನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಿದೆ ಎಂದು ತಿಳಿಸಿದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶೇ.73ರಷ್ಟಿದ್ದ ಮತದಾನ 2009ರ ವೇಳೆಗೆ ಶೇ.65ಕ್ಕೆ ಕುಸಿತಗೊಂಡಿತು. ಗ್ರಾಮೀಣ ಪ್ರದೇಶಕ್ಕಿಂತ ನಗರ ಪ್ರದೇಶದಲ್ಲಿ ಮತದಾನದ ಪ್ರಮಾಣ ಕಡಿಮೆಯಾಗುತ್ತಿದೆ. ಆದರೆ, ಗ್ರಾಮಾಂತರ ಪ್ರದೇಶದಲ್ಲಿ ಶೇ.75ರಷ್ಟು ಮತದಾನ ನಡೆಯುತ್ತಿದೆ ಎಂದು ಹೇಳಿದರು.
ಮತದಾರರ ಹಕ್ಕಿನ ಬಗ್ಗೆ ಅರಿವು ಮೂಡಿಸಲು ಹಾಗೂ ಮತದಾರರು ಮತದಾನದಲ್ಲಿ ಪಾಲ್ಗೊಳ್ಳುವಂತೆ ಮಾಡಲು ಸ್ವೀಪ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮತದಾರರ ಹೆಸರು ನಾಪತ್ತೆಯಾಗಿರುವ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಇದೇ 7ರವರೆಗೆ 18 ವರ್ಷ ತುಂಬಿರುವ ವ್ಯಕ್ತಿಗಳು ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಅವಕಾಶ ಇದೆ ಎಂದರು.
ಮತದಾನದ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ವಿವಿಧ ಸಂಘ, ಸಂಸ್ಥೆಗಳು, 30 ಸರ್ಕಾರೇತರ ಸಂಸ್ಥೆಗಳು, ಮಹಿಳಾ ಮಂಡಳಿ, ಯುವಕ ಸಂಘ, ನೆಹರು ಯುವ ಕೇಂದ್ರ ಜಾಥಾದಲ್ಲಿ ಪಾಲ್ಗೊಳ್ಳುತ್ತಿವೆ ಎಂದು ತಿಳಿಸಿದರು.
ಈಗಾಗಲೇ ಜಿಲ್ಲೆಯಲ್ಲಿ ಶೇ.95ರಷ್ಟು ಮತದಾರರ ಗುರುತಿನ ಚೀಟಿ ವಿತರಿಸಲಾಗಿದೆ. ಈ ಹಿಂದೆ ನಡೆದ ಚುನಾವಣೆಯಲ್ಲಿ ಮತದಾರರು ಭಾವಚಿತ್ರ ಹೊಂದಿರುವ ಗುರುತಿನ ಚೀಟಿ ಇಲ್ಲದಿದ್ದರೆ, ಪಡಿತರ ಚೀಟಿ ಸೇರಿದಂತೆ ಇತರೆ ಆಯೋಗ ಸೂಚಿಸಿದ್ದ ಇತರೆ ಗುರುತಿನ ಚೀಟಿ ತೋರಿಸಿ ಮತದಾನ ಮಾಡ ಬಹುದಾಗಿತ್ತು.