ಚಿತ್ರದುರ್ಗ: ಪ್ರತಿಭಾವಂತರನ್ನು ಗುರುತಿಸಿ ಪ್ರೋತ್ಸಾಹಿಸುವ ಕಾರ್ಯ ನಡೆಯಬೇಕು ಎಂದು ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಹೇಳಿದರು.
ನಗರದ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಮಂಗಳವಾರ ಸಂಜೆ ನಡೆದ ಪಾರಿವಾಳ ಸ್ಪರ್ಧೆ, ಚಿಣ್ಣರ ನೃತ್ಯಸಂಭ್ರಮ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಕ್ಕಳಲ್ಲಿನ ಪ್ರತಿಭೆ ಅನಾವರಣಕ್ಕೆ ಉತ್ತಮ ವೇದಿಕೆಯ ಅವಶ್ಯಕತೆಯಿದೆ. ಖಾಸಗಿ ಸಂಘ ಸಂಸ್ಥೆಗಳು ಮಕ್ಕಳಿಗೆ ವೇದಿಕೆ ಕಲ್ಪಿಸುವ ಕಾರ್ಯ ಕೈಗೊಳ್ಳುತ್ತಿದ್ದು, ಸರ್ಕಾರ ಹಾಗೂ ಜಿಲ್ಲಾಡಳಿತವೂ ಹೆಚ್ಚಿನ ಪ್ರೋತ್ಸಾಹ ನೀಡಿದರೆ ಸಾಧನೆ ತೋರುವುದು ಅನುಮಾನವಿಲ್ಲ ಎಂದರು.
ಕಬೀರಾನಂದ ಆಶ್ರಮದ ಶಿವಲಿಂಗಾನಂದ ಸ್ವಾಮೀಜಿ ಮಾತನಾಡಿ, ಕಲೆ, ಸಂಸ್ಕೃತಿ ಬೆಳೆಸಲು ಎಲ್ಲರೂ ಕೈಜೋಡಿಸಬೇಕು. ಪಾರಿವಾಳ ಸ್ಪರ್ಧೆ ನೆನಪಿಸುತ್ತಿರುವುದು ಸಂತಸದ ವಿಚಾರ ಎಂದು ತಿಳಿಸಿದರು.
ನಗರಸಭೆ ಮಾಜಿ ಅಧ್ಯಕ್ಷರಾದ ಬಿ. ಕಾಂತರಾಜ್, ಎಚ್.ಸಿ. ನಿರಂಜನ ಮೂರ್ತಿ, ಜಿ.ಪಂ. ಮಾಜಿ ಅಧ್ಯಕ್ಷ ರವಿಕುಮಾರ್, ನಗರಸಭೆ ಸದಸ್ಯ ಕುಮಾರ್, ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ನಿಶಾನಿ ಜಯಣ್ಣ, ಪೌರಸೇವಾ ನಿವೃತ್ತ ನೌಕರರ ಸಂಘದ ರಾಜ್ಯಾಧ್ಯಕ್ಷ ನಾರಾಯಣಚಾರ್, ಕರವೇ ಜಿಲ್ಲಾಧ್ಯಕ್ಷ ರಮೇಶ್ ಹಾಜರಿದ್ದರು.