ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರತ್ಯೇಕ ಅಪಘಾತ: ಬೈಕ್ ಸವಾರರ ಸಾವು

Last Updated 19 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಯಶವಂತಪುರ ಮತ್ತು ಸೆಂಟ್ರಲ್ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ ಪ್ರತ್ಯೇಕ ಅಪಘಾತಗಳಲ್ಲಿ ಖಾಸಗಿ ಕಂಪೆನಿ ಉದ್ಯೋಗಿ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ.ಪೀಣ್ಯದಿಂದ ನೆಲಮಂಗಲಕ್ಕೆ ಸಂಪರ್ಕ ಕಲ್ಪಿಸುವ ಮೇಲು ಸೇತುವೆ ಬಳಿ ಹೋಗುತ್ತಿದ್ದ ಬೈಕ್ ಸವಾರನಿಗೆ ಲಾರಿ ಮತ್ತು ಮಿನಿ ಲಾರಿ ಡಿಕ್ಕಿ ಹೊಡೆದ ಪರಿಣಾಮ ಹರಿಪ್ರಸಾದ್ (25) ಎಂಬುವರು ಮೃತಪಟ್ಟಿದ್ದಾರೆ.

ನೆಲಮಂಗಲ ನಿವಾಸಿಯಾದ ಹರಿಪ್ರಸಾದ್ ಗ್ಲೋಬಲ್ ಇ ಬ್ಯುಸಿನೆಸ್ ಆಪರೇಷನ್ ಪ್ರೈವೇಟ್ ಲಿಮಿಟೆಡ್ ಕಂಪೆನಿಯಲ್ಲಿ ಫೈನಾನ್ಷಿಯಲ್ ಅನಲಿಸ್ಟ್ ಆಗಿ ಕೆಲಸ ಮಾಡುತ್ತಿದ್ದರು. ಬುಧವಾರ ಮಧ್ಯಾಹ್ನ ಅವರು ಗೆಳೆಯನನ್ನು ನೋಡಲು ಗೊರಗುಂಟೆಪಾಳ್ಯದ ಮನೆಗೆ ಹೋಗಿದ್ದರು.

ಅಲ್ಲಿಂದ ಅವರು ಕೆಲಸಕ್ಕೆ ಹೋಗುತ್ತಿದ್ದಾಗ ಲಾರಿ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಕೆಳಗೆ ಬಿದ್ದ ಹರಿಪ್ರಸಾದ್ ಮೇಲೆ ಬೇರೊಂದು ಮಿನಿ ಲಾರಿ ಹರಿದ ಪರಿಣಾಮ ತೀವ್ರವಾಗಿ ಗಾಯಗೊಂಡವರು. ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.

ಅವಿವಾಹಿತರಾದ ಹರಿಪ್ರಸಾದ್, ರಂಗನಾಥ್ ಮತ್ತು ಮಂಜುಳಾ ದಂಪತಿಯ ಒಬ್ಬನೇ ಮಗ ಎಂದು ಪೊಲೀಸರು ಹೇಳಿದ್ದಾರೆ. ಯಶವಂತಪುರ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು  ಲಾರಿ ಮತ್ತು ಮಿನಿ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ.

ಸೆಂಟ್ರಲ್ ಠಾಣೆ: ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನ ಹಿಂಬದಿ ಸವಾರ ಮೃತಪಟ್ಟಿರುವ ಘಟನೆ ಮೈಸೂರು ರಸ್ತೆಯ ವಿನಾಯಕ ಚಿತ್ರಮಂದಿರದ ಬಳಿ ಮಂಗಳವಾರ ರಾತ್ರಿ ನಡೆದಿದೆ.
ಕಾಟನ್‌ಪೇಟೆಯ ಚೆಲುವಾದಿಪಾಳ್ಯ ನಿವಾಸಿ ಅಶೋಕ್ (25) ಮೃತಪಟ್ಟವರು.

ಕೂಲಿ ಕೆಲಸ ಮಾಡುತ್ತಿದ್ದ ಅವರು ಗೆಳೆಯನ ಜತೆ ಬೈಕ್‌ನಲ್ಲಿ ಹೋಗುತ್ತಿದ್ದ ವೇಳೆ ಬಸ್ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಕೆಳಗೆ ಬಿದ್ದ ಅಶೋಕ್ ಮೇಲೆ ಅದೇ ವಾಹನದ ಹಿಂದಿನ ಚಕ್ರ ಹರಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೈಕ್ ಚಾಲನೆ ಮಾಡುತ್ತಿದ್ದ ವ್ಯಕ್ತಿ ವಾಹನ ಬಿಟ್ಟು ಪರಾರಿಯಾಗಿದ್ದಾನೆ. ಆತ ಯಾರು ಎಂದು ಪತ್ತೆ ಮಾಡಲಾಗುವುದು. ಬಸ್ ಚಾಲಕನನ್ನು ಬಂಧಿಸಿ ವಾಹನವನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT