ಗುಬ್ಬಿ: ಪ್ರತ್ಯೇಕ ಮೀಸಲಾತಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಕಾಡುಗೊಲ್ಲರ ಕ್ಷೇಮಾಭಿವೃದ್ಧಿ ಸಂಘದ ಗುಬ್ಬಿ ತಾಲ್ಲೂಕು ಶಾಖೆ ನೇತೃತ್ವದಲ್ಲಿ ಸೋಮವಾರ ನಗರದಲ್ಲಿ ಬೃಹತ್ ಸಮಾವೇಶ ಹಾಗೂ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ಚನ್ನಬಸವೇಶ್ವರಸ್ವಾಮಿ ದೇವಾಲಯದ ಬಳಿ ನಡೆದ ಸಮಾವೇಶದಲ್ಲಿ ಪಾಲ್ಗೊಂಡ ಶಾಸಕ ಟಿ.ಬಿ.ಜಯಚಂದ್ರ ಮಾತನಾಡಿ, ರಾಜಕೀಯ ಇಚ್ಚಾಶಕ್ತಿ ಹೊಂದಿದ ಜನಾಂಗಗಳು ಮಾತ್ರ ರಾಜಕೀಯವಾಗಿ ಬಲಿಷ್ಠರಾಗಿದ್ದಾರೆ. ಈ ಸಂದರ್ಭದಲ್ಲಿ ಕಾಡುಗೊಲ್ಲ ಸಮುದಾಯದಲ್ಲಿ ರಾಜಕೀಯವಾಗಿ ಮಂಚೂಣಿಯಲ್ಲಿರುವ ನಾಯಕರ ಕೊರತೆ ಕಾಣುತ್ತಿದೆ ಎಂದರು.
ಶಾಸಕ ಎಸ್.ಆರ್.ಶ್ರೀನಿವಾಸ್ ಮಾತನಾಡಿ, ಕಾಡುಗೊಲ್ಲ ಜನಾಂಗದ ಹೋರಾಟಕ್ಕೆ ತಾತ್ವಿಕ ಅಂತ್ಯ ನೀಡುವ ಮೂಲಕ ವಿಧಾನಸಭೆಯಲ್ಲಿ ಈ ವಿಚಾರವಾಗಿ ಚರ್ಚಿಸಲು ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಯ ಎಲ್ಲ ಶಾಸಕರೊಂದಿಗೆ ಇದೇ 19ರಂದು ಸಮಾಲೋಚನೆ ನಡೆಸಲಾಗುವುದು ಎಂದು ತಿಳಿಸಿದರು.
ಕಾಡುಗೊಲ್ಲರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಘಟಕದ ಅಧ್ಯಕ್ಷ ನಾಗಪ್ಪ ಮಾತನಾಡಿ, ಶ್ರೇಣಿಕೃತ ಜಾತಿ ವ್ಯವಸ್ಥೆಯಲ್ಲಿ ಕಾಡುಗೊಲ್ಲ ಜನಾಂಗವನ್ನು ಅತ್ಯಂತ ಕೆಳ ಸ್ಥಾನದಲ್ಲಿರಿಸಲಾಗಿದೆ ಎಂದು ಆರೋಪಿಸಿದರು. ಚಿಕ್ಕಣ್ಣಸ್ವಾಮಿ ದೇವಾಲಯದ ಪ್ರಧಾನ ಅರ್ಚಕ ಪಾಪಣ್ಣ ಸಮಾವೇಶ ಉದ್ಘಾಟಿಸಿದರು.
ಸಂಘದ ಜಿಲ್ಲಾ ಗೌರವಾಧ್ಯಕ್ಷ ಚಂಗಾವರ ಕರಿಯಪ್ಪ, ಜಿಲ್ಲಾಧ್ಯಕ್ಷ ಈರಣ್ಣ, ತಾಲ್ಲೂಕು ಅಧ್ಯಕ್ಷ ಗುಂಡಿರಯ್ಯ, ಜನಾಂಗದ ಮುಖಂಡರಾದ ಜಿ.ಎನ್.ಬೆಟ್ಟಸ್ವಾಮಿ, ಗುಡ್ಡದಹಳ್ಳಿ ಶಿವಕುಮಾರ್, ಬಸವರಾಜು, ಕೆ.ಟಿ.ಕೆ ಪ್ರಭು, ಶಿರಾ ಮಹೇಶ್, ಯರ್ರಪ್ಪ ಇತರರು ಇದ್ದರು.