ಬೆಂಗಳೂರು: ಜಗದೀಶ ಶೆಟ್ಟರ್ ಅವರು ಪ್ರಸಕ್ತ ವರ್ಷದ ಫೆಬ್ರುವರಿಯಲ್ಲಿ ಮಂಡಿಸಿದ್ದ ಬಜೆಟ್ನಲ್ಲಿ ಮಠಗಳಿಗೆ ಘೋಷಿಸಿದ್ದ ಅನುದಾನಕ್ಕೆ ಸಂಬಂಧಿಸಿದಂತೆ ವಾಸ್ತವಿಕ ಸ್ಥಿತಿಗತಿ ಕುರಿತು ಪ್ರಮಾಣಪತ್ರ ಸಲ್ಲಿಸುವಂತೆ ಹೈಕೋರ್ಟ್ ಶುಕ್ರವಾರ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.
ಮಠಗಳು ಮತ್ತು ಧಾರ್ಮಿಕ ಸಂಸ್ಥೆಗಳಿಗೆ ಬಜೆಟ್ನಲ್ಲಿ ಅನುದಾನ ಘೋಷಿಸುವುದನ್ನು ಪ್ರಶ್ನಿಸಿ ದಲಿತ ಸಂಘರ್ಷ ಸಮಿತಿಯ ಮಾರಪ್ಪ ಎಂಬುವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಡಿ.ಎಚ್.ವಘೇಲಾ ಹಾಗೂ ನ್ಯಾಯಮೂರ್ತಿ ಎಸ್.ಎನ್ ಸತ್ಯನಾರಾಯಣ ಅವರಿದ್ದ ವಿಭಾಗೀಯ ಪೀಠದಲ್ಲಿ ನಡೆಯಿತು. ‘ಮಠಗಳಿಗೆ ಘೋಷಿಸಿದ್ದ ಅನುದಾನವನ್ನು ಈವರೆಗೂ ಬಿಡುಗಡೆ ಮಾಡಿಲ್ಲ’ ಎಂದು ರಾಜ್ಯ ಸರ್ಕಾರದ ಪರ ವಕೀಲರು ನ್ಯಾಯಪೀಠಕ್ಕೆ ತಿಳಿಸಿದರು.
‘ಮೌಖಿಕವಾಗಿ ಮಾಹಿತಿ ನೀಡಿದರೆ ಸಾಕಾಗುವುದಿಲ್ಲ. ಮಠಗಳಿಗೆ ಘೋಷಿಸಿರುವ ಅನುದಾನಕ್ಕೆ ಸಂಬಂಧಿಸಿದ ವಾಸ್ತವಿಕ ಸ್ಥಿತಿಗತಿ ಕುರಿತು ಪ್ರಮಾಣಪತ್ರ ಸಲ್ಲಿಸಿ’ ಎಂದು ಸರ್ಕಾರಕ್ಕೆ ಆದೇಶಿಸಿದ ನ್ಯಾಯಪೀಠ, ವಿಚಾರಣೆ ಮುಂದೂಡಿತು.