ಶಿವಮೊಗ್ಗ: ನಗರದ ದುರ್ಗಿಗುಡಿ ರಸ್ತೆಯ ವಿದ್ಯಾನಿಕೇತನ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ರಾಧಾಕೃಷ್ಣ ಅವರು ನಮ್ಮಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ಕಾಲೇಜಿನ ಪ್ರಥಮ ಪಿ.ಯು. ವಿದ್ಯಾರ್ಥಿನಿಯರಾದ ಮೇಧಿನಿ, ನಿಧಿಶ್ರೀ ಮತ್ತು ಅರ್ಚನಾ ಅವರು ಜಯನಗರ ಪೊಲೀಸ್ ಠಾಣೆಗೆ ಶುಕ್ರವಾರ ದೂರು ಸಲ್ಲಿಸಿದ್ದಾರೆ.
ಸಬ್ಇನ್ಸ್ಪೆಕ್ಟರ್ ಡಿ.ಆರ್. ಭರತ್ ಕುಮಾರ್ ದೂರು ದಾಖಲಿಸಿ ತನಿಖೆ ಕೈಗೊಂಡಿದ್ದಾರೆ. ಪ್ರಾಂಶುಪಾಲರು ಅಸಭ್ಯವಾಗಿ ವರ್ತಿಸಿದ್ದಾರೆ ಎಂಬುದು ಶುಕ್ರವಾರ ಬೆಳಕಿಗೆ ಬಂದಿದೆ. ಆಕ್ರೋಶಗೊಂಡ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ದಿಢೀರ್ ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದರು.
ವಿದ್ಯಾರ್ಥಿಗಳ ಪ್ರತಿಭಟನೆ ಕಾರಣ ಕಾಲೇಜಿಗೆ ರಜೆ ನೀಡಲಾಯಿತು. ಪ್ರಾಂಶುಪಾಲರು ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳಿದ್ದರಿಂದ ಕಾಲೇಜಿಗೆ ಬಂದಿರಲಿಲ್ಲ. ಪ್ರಾಂಶುಪಾಲರು ಒಳ್ಳೆಯ ನಡತೆ ಹೊಂದಿದ್ದು, ಕೆಲ ವಿದ್ಯಾರ್ಥಿಗಳು ಅವರ ಮೇಲೆ ಸುಳ್ಳು ಆಪಾದನೆ ಹೊರಿಸಿದ್ದಾರೆ ಎಂದು ಕೆಲ ವಿದ್ಯಾರ್ಥಿಗಳು ಹಾಗೂ ಕಾಲೇಜಿನ ಸಿಬ್ಬಂದಿ ಹೇಳಿದ್ದಾರೆ.