ಸಿದ್ದಾಪುರ: ‘ತಮಗೆ ದೊರೆತ ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯ ಗೌರವ ವಿದ್ಯಾರ್ಥಿಗಳಿಗೆ ಹಾಗೂ ಸಹೋದ್ಯೋಗಿಗಳಿಗೆ ಸಲ್ಲಬೇಕು’ ಎಂದು ಬಿದ್ರಕಾನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ತಮ್ಮಣ್ಣ ಬೀಗಾರ ಹೇಳಿದರು.
ತಾಲ್ಲೂಕಿನ ಬಿದ್ರಕಾನದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾ ಉಸ್ತುವಾರಿ ಸಮಿತಿ, ಪಾಲಕ-ಪೋಷಕರು,ಶಿಕ್ಷಕ ವೃಂದ ಹಾಗೂ ಊರ ನಾಗರಿಕರು ನೀಡಿದ ಸನ್ಮಾನ ಸ್ವೀಕರಿಸಿ, ಅವರು ಮಾತನಾಡಿದರು.
‘ನಾನು ಶಿಕ್ಷಕ ವೃತ್ತಿಯಲ್ಲಿ ಪ್ರಾಮಾಣಿಕ ಸೇವೆ ಸಲ್ಲಿಸಿದ ಫಲವಾಗಿ ಇಂತಹ ಉನ್ನತ ಪ್ರಶಸ್ತಿ ಲಭ್ಯವಾಗಿದೆ. ಈ ತಾಲ್ಲೂಕು ನನ್ನನ್ನು ಬೆಳೆಸಿದೆ.ಇಲ್ಲಿಯ ಜನರ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳ ಮಾರ್ಗದರ್ಶನದಿಂದ ಶಿಕ್ಷಣ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಕೆಲಸ ಮಾಡಲು ಸಾಧ್ಯವಾಗಿದೆ’ ಎಂದರು.
ಗ್ರಾ.ಪಂ. ಅಧ್ಯಕ್ಷೆ ಸೀತಾ ಹೆಗಡೆ ಕಾರ್ಯಕ್ರಮ ಉದ್ಘಾಟಿಸಿದರು. ಸ್ಥಳೀಯ ಪ್ರೌಢಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ಎಸ್.ವಿ.ಹೆಗಡೆ ಮಗೇಗಾರ, ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಕನ್ನೇಶ ಕೋಲಸಿರ್ಸಿ, ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಕೆಕ್ಕಾರ ನಾಗರಾಜ ಭಟ್ಟ, ಕಾರ್ಯದರ್ಶಿ ರಮೇಶ ಹಾರ್ಸಿಮನೆ, ಸೇವಾ ಸಹಕಾರಿ ಸಂಘದ ಅಧ್ಯಕ್ಷ ಜಿ.ಟಿ. ಹೆಗಡೆ ಮಾತನಾಡಿದರು.