ಮೈಸೂರು: ಚಾಮುಂಡಿ ಪಾದದ ಬಳಿ ಬೆಟ್ಟ ಹತ್ತಲು ಬಂದ ನಾಗರಿಕರನ್ನು ಭಾನುವಾರ ‘ಪ್ಲಾಸ್ಟಿಕ್ ಮುಕ್ತ ವಲಯವನ್ನಾಗಿ ಮಾಡಿ’ ಎಂಬ ಸಂದೇಶದೊಂದಿಗೆ 200 ಕ್ಕೂ ಹೆಚ್ಚು ವಿದ್ಯಾರ್ಥಿ/ವಿದ್ಯಾರ್ಥಿನಿಯರು ಬರಮಾಡಿಕೊಂಡರು.
ನಗರದ ವಿದ್ಯಾವರ್ಧಕ ಎಂಜಿನಿಯರಿಂಗ್ ಕಾಲೇಜು ಹಮ್ಮಿಕೊಂಡಿರುವ ‘ಆಸ್ಪೆರಾ-ಉದ್ಯಮಶೀಲತೆ’ ಕಾರ್ಯಕ್ರಮದ ಅಂಗವಾಗಿ ಚಾಮುಂಡಿ ಬೆಟ್ಟ ಮತ್ತು ಸುತ್ತಮುತ್ತಲಿನ ಪ್ರದೇಶವನ್ನು ಪ್ಲಾಸ್ಟಿಕ್ ಮುಕ್ತ ವಲಯವನ್ನಾಗಿ ಮಾಡಲು ಪ್ಪಾಸ್ಟಿಕ್ ವಸ್ತುಗಳನ್ನು ಸಂಗ್ರಹಿಸುವ ಕೆಲಸವನ್ನು ಮಾಡಿದರು.
ಈ ಸ್ವಚ್ಛತಾ ಕಾರ್ಯಕ್ರಮಕ್ಕೆ ವಿದ್ಯಾವಿಕಾಸ ಮತ್ತು ಶಾರದ ವಿಲಾಸ ಕಾಲೇಜಿನ ವಿದ್ಯಾರ್ಥಿಗಳು ಸಹ ಕೈ ಜೋಡಿಸಿದ್ದರು. ಸುಮಾರು 200ಕ್ಕೂ ಅಧಿಕ ವಿದ್ಯಾರ್ಥಿಗಳು ಉತ್ಸುಕತೆಯಿಂದ ಪಾಲ್ಗೊಂಡಿದ್ದರು. ವಿದ್ಯಾರ್ಥಿ ಗಳ ಜೊತೆ ಮೇಯರ್ ಸಂದೇಶಸ್ವಾಮಿ ಮತ್ತು ಉಪಮೇಯರ್ ಪುಷ್ಪಲತಾ ಜಗನ್ನಾಥ್ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಿದ್ಯಾರ್ಥಿಗಳಿಗೆ ಹುರುಪು ತುಂಬಿದರು.
ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿದ ಮೇಯರ್ ಸಂದೇಶಸ್ವಾಮಿ ಮಾತನಾಡಿ, ಚಾಮುಂಡಿ ಬೆಟ್ಟ ಪ್ಲಾಸ್ಟಿಕ್ ಮುಕ್ತ ವಲಯ ಎಂದು ಘೋಷಿಸಲಾಗಿದೆ. ಆದರೂ ಪ್ಲಾಸ್ಟಿಕ್ ವಸ್ತುಗಳು ಅಲ್ಲಲ್ಲಿ ಕಂಡು ಬರುತ್ತಿವೆ. ಪ್ರವಾಸಿಗರ ಪರಿಸರ ಕಾಳಜಿ ಕೊರತೆ ಮತ್ತು ಕಾರ್ಮಿಕರ ಕೊರತೆಯಿಂದ ಪ್ಲಾಸ್ಟಿಕ್ ಮುಕ್ತ ವಲಯವನ್ನಾಗಿ ಮಾಡಲು ತೊಡಕಾಗಿದೆ ಎಂದರು.
ಜಿಲ್ಲಾಡಳಿತ ಚಾಮುಂಡಿ ಬೆಟ್ಟವನ್ನು ಪ್ಲಾಸ್ಟಿಕ್ ಮುಕ್ತ ವಲಯವನ್ನಾಗಿ ಮಾಡಲು ಕ್ರಮಕೈಗೊಳ್ಳಬೇಕು. ಇದಕ್ಕೆ ನಾಗರಿಕರ ಸಹಕಾರವೂ ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಕಾಲೇಜು ವಿದ್ಯಾರ್ಥಿಗಳು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡು ಮಾದರಿಯಾಗಿದ್ದಾರೆ ಮತ್ತು ಪರಿಸರ ನೈರ್ಮಲ್ಯದ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ ಎಂದು ಶ್ಲಾಘಿಸಿದರು.
ಮಾಜಿ ಮೇಯರ್ ಪುರುಷೋತ್ತಮ್, ಪಾಲಿಕೆ ಸದಸ್ಯರಾದ ಗಿರೀಶ್ ಪ್ರಸಾದ್, ಪಾರ್ಥಸಾರಥಿ, ಪಾಲಿಕೆ ಆರೋಗ್ಯಾಧಿಕಾರಿ ಡಾ.ನಾಗರಾಜು, ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ರತ್ನಮ್ಮ, ಡಾ.ಎಚ್.ಎಸ್.ದಯಾನಂದ ಇತರರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.